
ದಾವಣಗೆರೆ: ‘ರಾಜ್ಯದಲ್ಲಿ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮದ್ಯ ಮಾರಾಟಗಾರರ ಅಸೋಸಿಯೇಷನ್ ಹಾಗೂ ಗುತ್ತಿಗೆಯಲ್ಲಿ ಶೇ 60 ರಷ್ಟು ಕಮಿಷನ್ ದಂಧೆ ನಡೆಯುತ್ತಿದೆ ಎಂದು ಗುತ್ತಿಗೆದಾರರು ದೂರು ನೀಡಿದ್ದರೂ, ರಾಜ್ಯ ಸರ್ಕಾರ ಅದಕ್ಕೆ ದಾಖಲೆ ಕೇಳುತ್ತಾ ಕಾಲಹರಣ ಮಾಡುತ್ತಿದೆ’ ಎಂದು ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.
‘ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭಂಡತನ ತೋರುತ್ತಿದೆ. ಈ ಸರ್ಕಾರದ ವಿರುದ್ಧ ಬಿಜೆಪಿಯು ಹೋರಾಟ ಮುಂದುವರಿಸಲಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಕೇಂದ್ರ ಸರ್ಕಾರದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ರಾಜ್ಯ ಸರ್ಕಾರವೇ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ಕಳೆದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ಘೋಷಣೆ ಮಾಡಿದ್ದು ಸತ್ಯ. ಈ ವರ್ಷದ ಬಜೆಟ್ನಲ್ಲಿ ಆ ಬಗ್ಗೆ ಪ್ರಸ್ತಾಪಿಸದಿದ್ದರೂ ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳುವ ನಿರೀಕ್ಷೆ ಇದೆ’ ಎಂದರು.
‘ಯಾವುದೇ ಒಂದು ಯೋಜನೆ ಸಂಬಂಧ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕಾದರೆ, ಸಂಬಂಧಿಸಿದ ರಾಜ್ಯ ಸರ್ಕಾರವು ಸರಿಯಾದ ವರದಿ ಸಲ್ಲಿಸಬೇಕು. ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಒತ್ತಡ ಹೇರಬೇಕು. ಹೀಗೆ ಸರಿಯಾದ ವರದಿ ನೀಡದ ಹಾಗೂ ಕಳಪೆ ಕಾಮಗಾರಿಯ ಕಾರಣಕ್ಕೆ ಜಲ ಜೀವನ್ ಮಿಷನ್ ಯೋಜನೆಯಡಿ ₹ 13,000 ಕೋಟಿ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ’ ಎಂದರು.
‘ವಿಬಿ-ಜಿ ರಾಮ್ಜಿ ಯೋಜನೆಯು ಗ್ರಾಮ ಪಂಚಾಯಿತಿಗಳ ಅಧಿಕಾರ ಮತ್ತು ಕೆಲಸ ಕಿತ್ತುಕೊಳ್ಳುವುದಿಲ್ಲ. 100ರಿಂದ 125ರ ವರೆಗೆ ಮಾನವ ದಿನಗಳನ್ನು ಸೃಜಿಸಲಾಗಿದೆ. ನಕಲಿ ಜಾಬ್ ಕಾರ್ಡ್ ಮೂಲಕ ಹಣ ದುರುಪಯೋಗವಾಗುತ್ತಿರುವುದನ್ನು ತಡೆಯಲು ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ’ ಎಂದರು.
ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಮುಖಂಡರಾದ ಲೋಕಿಕೆರೆ ನಾಗರಾಜ್, ಬಿ.ಜಿ. ಅಜಯಕುಮಾರ್, ಬಿ.ಎಂ. ಸತೀಶ್, ಅನಿಲ್ಕುಮಾರ ನಾಯ್ಕ, ಗೌತಮ್ ಜೈನ್, ಎಚ್.ಪಿ. ವಿಶ್ವಾಸ್, ಹರೀಶ್ ಹೊನ್ನೂರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.