ಪ್ರಾತಿನಿಧಿಕ ಚಿತ್ರ
ದಾವಣಗೆರೆ: ಕಾಂಗ್ರೆಸ್ನ ಸ್ಥಳೀಯ ಮುಖಂಡ, ನಗರಾಭಿವೃದ್ಧಿ ಪ್ರಾಧಿಕಾರ (ಧೂಡಾ)ದ ಮಾಜಿ ಅಧ್ಯಕ್ಷ ಆಯೂಬ್ ಪೈಲ್ವಾನ್ ಅವರ ಪುತ್ರರಿಬ್ಬರು ಶನಿವಾರ ಸಂಜೆ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ.
ಇಲ್ಲಿನ ಬಡಾವಣೆ ಠಾಣೆಯ ಇನ್ಸ್ಪೆಕ್ಟರ್ ಆರ್.ಗಾಯತ್ರಿ ಹಾಗೂ ಕಾನ್ಸ್ಟೆಬಲ್ಗಳಾದ ಕೆಂಚಪ್ಪ ಮತ್ತು ಹರೀಶ್ ಹಲ್ಲೆಗೊಳಗಾದವರು.
ಹಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ಆಯೂಬ್ ಪೈಲ್ವಾನ್ ಅವರ ಪುತ್ರ ಹಸೇನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಕ್ರಿಯವಾಗಿರುವ, ಮುಸ್ಲಿಂ ಸಮುದಾಯದ ಇಬ್ಬರು ಮುಖಂಡರ ಪುತ್ರರ ನಡುವೆ ಇಲ್ಲಿನ ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯಾಹ್ನ ಗಲಾಟೆ ನಡೆದಿತ್ತು. ವಿಚಾರಣೆಗೆ ಆಯೂಬ್ ಪೈಲ್ವಾನ್ ಅವರ ಮನೆಗೆ ಪೊಲೀಸರು ತೆರಳಿದ್ದರು. ಆಗ ಆಯೂಬ್ ಪೈಲ್ವಾನ್ ಪುತ್ರರಾದ ಹಸೇನ್, ಹುಸೇನ್ ಹಾಗೂ ಸಂಬಂಧಿ ಅಮ್ಜಾನ್ ಅವರು ಪೊಲೀಸರ ಮೊಬೈಲ್ ಕಸಿದುಕೊಂಡು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.