ADVERTISEMENT

ಸಂವಿಧಾನ ಶಿಲ್ಪಿಗೆ ಶಿಲ್ಪಾಕೃತಿಯ ಮೆರುಗು

ಡಾ.ಬಿ.ಆರ್‌. ಅಂಬೇಡ್ಕರ್‌ ಪುತ್ಥಳಿ ಅನಾವರಣಗೊಳಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2022, 5:07 IST
Last Updated 14 ಫೆಬ್ರುವರಿ 2022, 5:07 IST
ಅಂಬೇಡ್ಕರ್‌ ಅನುಯಾಯಿಗಳಿಗೆ ತಿಳಿಸದೇ ಅಂಬೇಡ್ಕರ್‌ ಪ್ರತಿಮೆ ಅನಾವರಣ ಮಾಡಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್‌ ಅನುಯಾಯಿಗಳಿಗೆ ತಿಳಿಸದೇ ಅಂಬೇಡ್ಕರ್‌ ಪ್ರತಿಮೆ ಅನಾವರಣ ಮಾಡಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್‌ ಅನುಯಾಯಿಗಳು ಪ್ರತಿಭಟನೆ ನಡೆಸಿದರು.   

ದಾವಣಗೆರೆ: ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಅತ್ಯುತ್ತಮ ಶಿಲ್ಪಾಕೃತಿ ನಿರ್ಮಿಸುವ ಮೂಲಕ ಅಂಬೇಡ್ಕರ್‌ ಅವರಿಗೆ ಗೌರವ ಸಲ್ಲಿಸಲಾಗಿದೆ. ಕಲಾಕೃತಿ ಅತ್ಯುತ್ತಮವಾಗಿ ಮೂಡಿಬಂದಿದೆ. ಸಂವಿಧಾನ ಶಿಲ್ಪಿಗೆ ಹೊಸ ಮೆರಗು ಸಿಕ್ಕಂತಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಬಣ್ಣಿಸಿದರು.

ನಗರದ ಕೆಇಬಿ ವೃತ್ತದಲ್ಲಿ ಪಾಲಿಕೆಯಿಂದ ನಿರ್ಮಿಸಿರುವ ಅಂಬೇಡ್ಕರ್ ಪುತ್ಥಳಿಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

‘ಇಲ್ಲಿ ಸಣ್ಣ ಪುತ್ಥಳಿ ಮಾತ್ರ ಇತ್ತು. ಅದು ಕಾಣುತ್ತಿರಲಿಲ್ಲ. ಹೀಗಾಗಿ, ಅಂಬೇಡ್ಕರ್ ಪ್ರತಿಮೆ ಮತ್ತು ಈ ವೃತ್ತ ವಿಜೃಂಭಿಸಬೇಕು ಎಂಬುದು ನಮ್ಮ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಇಲ್ಲಿ ಬೃಹತ್ ಪುತ್ಥಳಿ ಅನಾವರಣ ಮಾಡಲಾಗಿದೆ’ ಎಂದು ಹೇಳಿದರು.

ADVERTISEMENT

ಮೇಯರ್ ಎಸ್.ಟಿ.ವೀರೇಶ್, ‘ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕಾಗಿ ಎರಡು ವರ್ಷಗಳ ಹಿಂದೆ ಬಜೆಟ್‍ನಲ್ಲಿ ಅನುದಾನ ಮೀಸಲಿಡಲಾಗಿತ್ತು. ಇಲ್ಲಿ ದೊಡ್ಡ ಪುತ್ಥಳಿ ನಿರ್ಮಿಸಬೇಕು ಎಂಬುದು ಅನೇಕ ಹೋರಾಟಗಾರರ ಹಲವು ದಿನಗಳ ಕನಸಾಗಿತ್ತು. ಅದು ಈಗ ಸಾಕಾರಗೊಂಡಿದೆ’ ಎಂದು ಹೇಳಿದರು.

ಎಲ್ಲರಿಗೂ ಸಮಬಾಳು ಮತ್ತು ಸಮಪಾಲು ಬಿಜೆಪಿಯ ಧ್ಯೇಯವಾಗಿದೆ. ರಾಷ್ಟ್ರಕ್ಕಾಗಿ ಜೀವನ ತೇಯ್ದವರ ಆದರ್ಶ ಪಾಲನೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಮಹಾನ್ ವ್ಯಕ್ತಿಗಳ ಆದರ್ಶ ಪ್ರತಿನಿತ್ಯ ಸ್ಮರಣೆಯಾಗಲಿ ಎಂಬ ಉದ್ದೇಶದಿಂದ ಇಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಶಾಸಕ ಎಸ್.ಎ. ರವೀಂದ್ರನಾಥ್ ಮಾತನಾಡಿ, ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಇಲ್ಲದೆ ಹೋಗಿದ್ದರೆ, ನಾವು ಇನ್ನೂ ಅಸ್ಪೃಶ್ಯರಾಗಿ ಉಳಿಯುತ್ತಿದ್ದೆವು. ಒಳ್ಳೆಯ ಜಾಗದಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಪಾಲಿಕೆ ಈ ರೀತಿಯ ಮತ್ತಷ್ಟು ಒಳ್ಳೆಯ ಕೆಲಸ ಮಾಡಲಿ’ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಉಪ ಮೇಯರ್ ಶಿಲ್ಪಾ ಜಯಪ್ರಕಾಶ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾ ಪ್ರಕಾಶ್, ಎಲ್.ಡಿ. ಗೋಣೆಪ್ಪ, ಸದಸ್ಯರಾದ ಪ್ರಸನ್ನಕುಮಾರ್, ಬಿ.ಜಿ. ಅಜಯಕುಮಾರ್, ಜಯಮ್ಮ ಗೋಪಿನಾಯ್ಕ್‌, ಗೀತಾ ದಿಳ್ಳೆಪ್ಪ, ಸೌಮ್ಯಾ ನರೇಂದ್ರಕುಮಾರ್‌, ಶಾಂತಕುಮಾರ್‌ ಸೋಗಿ, ಕೆ.ಎಂ. ವೀರೇಶ್‌, ವಿರೋಧಪಕ್ಷದ ನಾಯಕ ಎ. ನಾಗರಾಜ್‌ ಅವರೂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.