ADVERTISEMENT

ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ 16ಕ್ಕೆ: ನಳಿನ್‌ಕುಮಾರ್‌ ಕಟೀಲ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 15:24 IST
Last Updated 12 ಡಿಸೆಂಬರ್ 2019, 15:24 IST

ದಾವಣಗೆರೆ: ಬಿಜೆಪಿ ಜಿಲ್ಲಾ ಘಟಕದಿಂದ ಡಿ. 16ರಂದು ಮಧ್ಯಾಹ್ನ 12ಕ್ಕೆ ನಗರದ ಹದಡಿ ರಸ್ತೆಯ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರ ಸನ್ಮಾನ ಸಮಾರಂಭ ಹಾಗೂ ಕಾರ್ಯಕರ್ತರೊಂದಿಗೆ ಸಂವಾದ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್‌ ಜಾಧವ್‌ ಹೇಳಿದರು.

ರಾಜ್ಯ ಘಟಕದ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ದಾವಣಗೆರೆಗೆ ನಳಿನ್‌ಕುಮಾರ್‌ ಕಟೀಲ್‌ ಬರುತ್ತಿರುವ ಕಾರಣ ಅವರಿಗೆ ಹಾಗೂ ಪಾಲಿಕೆಯ ಬಿಜೆಪಿ ಸದಸ್ಯರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಎಂ.ಪಿ. ರೇಣುಕಾಚಾರ್ಯ, ಮಾಡಾಳ್‌ ವಿರೂಪಾಕ್ಷಪ್ಪ, ಎಸ್‌.ವಿ. ರಾಮಚಂದ್ರ, ಪ್ರೊ.ಎನ್‌.ಲಿಂಗಣ್ಣ, ಕರುಣಾಕರ ರೆಡ್ಡಿ ಭಾಗವಹಿಸಲಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

‘ಪಾಲಿಕೆಯ ಚುಕ್ಕಾಣಿ ಹಿಡಿಯಲು ಪ್ರಯತ್ನ ನಡೆಸಿದ್ದೇವೆ. ಬೆಂಬಲ ನೀಡುವಂತೆ ಜೆಡಿಎಸ್‌ ಸದಸ್ಯರ ಜೊತೆ ಮಾತುಕತೆ ನಡೆಸಲಾಗಿದೆ. ಬಂಡಾಯ ಅಭ್ಯರ್ಥಿಗಳಾಗಿ ಗೆದ್ದವರು ಹಾಗೂ ಪಕ್ಷದಿಂದ ಹೊರಹೋಗಿ ಸೋತವರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ಉಮಾ ಪ್ರಕಾಶ್, ಶಿ‍ವಪ್ರಕಾಶ್ ಈಗಾಗಲೇ ಪಕ್ಷವನ್ನು ಸೇರಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

‘ಪುತ್ರ ರಾಕೇಶ್ ಜಾಧವ್‌ ಅವರನ್ನು ಮೇಯರ್‌ ಮಾಡಲು ಕಸರತ್ತು ನಡೆಸಿದ್ದೀರಿ ಎಂಬ ಮಾತಿದೆಯಲ್ಲ’ ಎಂಬ ಪ್ರಶ್ನೆಗೆ, ‘ಮೇಯರ್‌ ಆಯ್ಕೆ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ಈ ಬಗ್ಗೆ ಯಾವುದೇ ಒತ್ತಡ ಹೇರಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಜಿಲ್ಲೆಗೆ ಸಚಿವ ಸ್ಥಾನ ನೀಡುವ ಕುರಿತೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದೇವೆ’ ಎಂದು ತಿಳಿಸಿದರು.

ಮುಖಂಡರಾದ ಎಚ್‌.ಎನ್‌. ಶಿವಕುಮಾರ್‌, ರಮೇಶ್ ನಾಯ್ಕ್, ಧನಂಜಯ ಕಡ್ಲೆಬಾಳು, ಸಂಗನಗೌಡ, ಗೋಣಪ್ಪ, ಸೋಗಿ ಶಾಂತಕುಮಾರ್, ಪ್ರಸನ್ನಕುಮಾರ್‌, ಟಿಂಕರ್‌ ಮಂಜುನಾಥ್‌, ಕರಿಬಸಪ್ಪ, ಶಿವನಗೌಡ ಪಾಟೀಲ, ಪಿ.ಸಿ. ಶ್ರೀನಿವಾಸ್‌, ಧನುಷ್‌ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.