ADVERTISEMENT

ಪ್ರಜಾಪ್ರಭುತ್ವ ವ್ಯವಸ್ಥೆಯ ಶತ್ರು ಭ್ರಷ್ಟಾಚಾರ

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಡಿ.ಕೆ. ವೇಲಾ ಬೇಸರ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 4:26 IST
Last Updated 29 ಅಕ್ಟೋಬರ್ 2025, 4:26 IST
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಸೈಬರ್ ಭದ್ರತಾ ಜಾಗೃತಿ ಮಾಸ ಹಾಗೂ ಅರಿವು ಸಪ್ತಾಹವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಡಿ.ಕೆ. ವೇಲಾ ಉದ್ಘಾಟಿಸಿದರು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ಸೈಬರ್ ಭದ್ರತಾ ಜಾಗೃತಿ ಮಾಸ ಹಾಗೂ ಅರಿವು ಸಪ್ತಾಹವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಡಿ.ಕೆ. ವೇಲಾ ಉದ್ಘಾಟಿಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ನ್ಯಾಯದ ತತ್ವವನ್ನು ದುರ್ಬಲಗೊಳಿಸುವ ಹಾಗೂ ಸ‌ರ್ಕಾರಿ ಸಂಸ್ಥೆಗಳ ಶಕ್ತಿಯನ್ನು ಕುಗ್ಗಿಸುವ ಭ್ರಷ್ಟಾಚಾರ ಪ್ರಜಾಪ್ರಭುತ್ವ ವ್ಯವಸ್ಥೆಯ ಶತ್ರು. ಇದು ಜನರ ವಿಶ್ವಾಸವನ್ನು ಕೂಡ ಹಾಳು ಮಾಡುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಡಿ.ಕೆ. ವೇಲಾ ಬೇಸರ ವ್ಯಕ್ತಪಡಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೈಬರ್‌ ಭದ್ರತಾ ಮಾಸ ಹಾಗೂ ಅರಿವು ಸಪ್ತಾಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮ ಮಟ್ಟದಿಂದ ಆರಂಭವಾದ ಭ್ರಷ್ಟಾಚಾರ ತಾಲ್ಲೂಕು ಕಚೇರಿ, ಪೊಲೀಸ್ ಠಾಣೆ ಸೇರಿದಂತೆ ವಿವಿಧ ಇಲಾಖೆಗಳ ಕಚೇರಿ ವರೆಗೂ ತಲುಪಬಹುದು. ಅಧಿಕಾರಿಯೊಬ್ಬರು ಸಣ್ಣ ಪ್ರಮಾಣದ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸದೇ ಇದ್ದಾಗ ಜನರ ಮನಸ್ಸಿನಲ್ಲಿ ಬಹುದೊಡ್ಡ ಪರಿಣಾಮವುಂಟು ಮಾಡುವ ಸಾಧ್ಯತೆ ಹೆಚ್ಚು’ ಎಂದು ಹೇಳಿದರು.

ADVERTISEMENT

‘ಅಧಿಕಾರಿಗಳು ಹಕ್ಕು, ಕರ್ತವ್ಯಗಳನ್ನು ಮಾರಾಟ ಮಾಡಿಕೊಂಡು ಜನರಿಗೆ ತೊಂದರೆ ನೀಡಬಾರದು. ಪ್ರಾಮಾಣಿಕತೆ, ಬದ್ಧತೆಯಿಂದ ಕೆಲಸ ಮಾಡಬೇಕು. ಭ್ರಷ್ಟಾಚಾರವು ಪ್ರತಿಯೊಬ್ಬ ಅಧಿಕಾರಿಯ ನೈತಿಕ ಬದ್ಧತೆಯ ವಿಷಯವಾಗಿದೆ. ಸರ್ಕಾರಿ ಸೇವೆಯನ್ನು ಪಡೆಯುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಸತ್ಯ, ನಿಷ್ಠೆ, ಪ್ರಾಮಾಣಿಕತೆಯಿಂದ ವಿಳಂಬ ಮಾಡದೇ ಕರ್ತವ್ಯ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

‘ಭ್ರಷ್ಟಾಚಾರ ಮುಕ್ತ ಜಿಲ್ಲೆಗೆ ಪ್ರತಿಯೊಬ್ಬರೂ ಪಣತೊಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಕೆಲಸ ಮಾಡಬೇಕಿದೆ. ಸರ್ಕಾರಿ ಕಚೇರಿಗಳಲ್ಲಿ ಕಡತ, ದಾಖಲೆಗಳ ವಿಲೇವಾರಿಯಲ್ಲಿ ಲೋಪ ಆಗದಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಅಭಿಪ್ರಾಯಪಟ್ಟರು.

‘ಸರ್ಕಾರಿ ಸೇವೆ ಪಡೆಯಲು ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸರಿಯಾಗಿ ವರ್ತಿಸಬೇಕು. ಸೌಜನ್ಯದಿಂದ ಕೆಲಸ ಮಾಡುವ ಪ್ರವೃತ್ತಿಯನ್ನು ಸರ್ಕಾರಿ ನೌಕರರು ರೂಢಿಸಿಕೊಳ್ಳಬೇಕು. ಹಾರಿಕೆಯ ಉತ್ತರ ನೀಡಿ ಸರ್ವಾಧಿಕಾರಿಯಂತೆ ವರ್ತಿಸಬಾರದು. ಅಂದಿನ ಕೆಲಸವನ್ನು ಅಂದೇ ಪೂರ್ಣಗೊಳಿಸುವ ಸಂಕಲ್ಪ ತೊಡಬೇಕು’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕಿವಿಮಾತು ಹೇಳಿದರು.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪುರೆ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.