ದಾವಣಗೆರೆ: ‘ಕಕ್ಕರಗೊಳ್ಳ ಗ್ರಾಮಕ್ಕೆ 300 ವಿದ್ಯಾರ್ಥಿಗಳು ಉಳಿದುಕೊಳ್ಳುವಂತಹ ಸುಸಜ್ಜಿತ ವಸತಿ ನಿಲಯವನ್ನು ಮಂಜೂರು ಮಾಡಿಸಿ, ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಕಕ್ಕರಗೊಳ್ಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ದೇವತೆ ಊರಮ್ಮ ದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಸರ್ಕಾರ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತಿದೆ. ಬಾಡಿಗೆ ಮನೆಯನ್ನಾದರೂ ಮಾಡಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ’ ಎಂದರು.
‘ಗ್ರಾಮೀಣ ಭಾಗಕ್ಕೂ ಸೌಲಭ್ಯ ದೊರೆಯಬೇಕಿದೆ. ಜಲಜೀವನ್ ಮಿಷನ್ ಮೂಲಕ ಗ್ರಾಮೀಣ ಭಾಗದಲ್ಲಿ 24 ತಾಸು ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಮೂರು ಗ್ರಾಮಗಳಲ್ಲಿ ನಿರಂತರ ನೀರು ಪೂರೈಕೆ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಕಕ್ಕರಗೊಳ್ಳ ಗ್ರಾಮದಲ್ಲಿಯೂ ಈ ಸೌಲಭ್ಯ ಒದಗಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ’ ಎಂದು ದೇವಸ್ಥಾನ ಉದ್ಘಾಟಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಗ್ರಾಮದ ಮುಖಂಡರಾದ ಕೆ.ಜಿ.ಬಸವನಗೌಡ್ರು, ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಬಿ.ಡಿ.ಕುಂಬಾರ್, ಮುಖಂಡರಾದ ಸಿದ್ದಪ್ಪ, ಎನ್.ಜಿ.ಪುಟ್ಟಸ್ವಾಮಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗ್ರಾಮದಲ್ಲಿ ಮಾಡಲಾಯಿತು. ಇದೇ ವೇಳೆ ಗ್ರಾಮದಲ್ಲಿ ಸಂಸದರ ಅನುದಾನದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.