
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಎದುರಾಗಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೆಲಸ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ಶಾಮನೂರು ಶಿವಶಂಕರಪ್ಪ ನಿಧನದಿಂದ ಎದುರಾಗಲಿರುವ ಉಪಚುನಾವಣೆಯಲ್ಲಿ ಅಹಿಂದ ವರ್ಗದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂಬ ಒತ್ತಾಯಕ್ಕೆ ಸಂಬಂಧಿಸಿದಂತೆ ಸಚಿವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಚುನಾವಣೆಗೆ ಸ್ಪರ್ಧಿಸುವ ಅಪೇಕ್ಷೆ ಅನೇಕರಲ್ಲಿದೆ. ಕ್ಷೇತ್ರದಲ್ಲಿ ಕುಟುಂಬದ ಸದಸ್ಯರೇ ಸ್ಪರ್ಧೆ ಮಾಡಬೇಕು ಎಂಬ ಹಠವಿಲ್ಲ. ಕ್ಷೇತ್ರ ಗೆಲ್ಲುವುದು ಮಾತ್ರವೇ ಪಕ್ಷದ ಗುರಿ. ಹೈಕಮಾಂಡ್ ಕೇಳಿದಾಗ ಕೂಲಂಕಷವಾಗಿ ಮಾತನಾಡುವೆ’ ಎಂದು ಹೇಳಿದರು.
ಪುತ್ರ ಸಮರ್ಥ ಸ್ಪರ್ಧೆಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಮನೆ ಮಂದಿಯಲ್ಲ ರಾಜಕೀಯ ಮಾಡಿದರೆ ಹೊಟ್ಟೆಪಾಡಿಗೆ ಏನು ಮಾಡುವುದು’ ಎಂದು ಮರುಪ್ರಶ್ನಿಸಿದರು. ‘ಸಮರ್ಥ ಇನ್ನೂ ಯುವಕ. ಸಾಕಷ್ಟು ಕಾಲಾವಕಾಶವಿದೆ. ಸಹೋದರ ಎಸ್.ಎಸ್. ಗಣೇಶ್ ಹೆಸರು ಮುನ್ನೆಲೆಗೆ ಬರುತ್ತಿದೆ. ಅವರೊಂದಿಗೆ ಚರ್ಚೆ ಮಾಡುತ್ತೇನೆ. ಈ ವಿಚಾರದಲ್ಲಿ ಕುಟುಂಬ ಇನ್ನೂ ತೀರ್ಮಾನಕ್ಕೆ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಜನಪ್ರತಿನಿಧಿಯಾದ ನನ್ನೊಂದಿಗೆ ಅನೇಕರು ಫೋಟೊ ತೆಗೆಸಿಕೊಳ್ಳುತ್ತಾರೆ. ಅವರು ಮಾಡುವ ತಪ್ಪುಗಳಿಗೆ ನಾನು ಹೇಗೆ ಹೊಣೆಗಾರ ಆಗುತ್ತೇನೆ? ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.