ಹಿರೇಮಳಲಿ (ಚನ್ನಗಿರಿ): ತಾಲ್ಲೂಕಿನ ಹಿರೇಮಳಲಿ ಗ್ರಾಮದಲ್ಲಿ 2021ನೇ ಸಾಲಿನಿಂದಲೂ ಪರಿಶಿಷ್ಟ ಜಾತಿ, ಪಂಗಡ, ಒಬಿಸಿ ಹಾಗೂ ಅಲ್ಪಸಂಖ್ಯಾತ ವರ್ಗಗಳ ಬಡ ಕುಟುಂಬಗಳಿಗೆ ವಸತಿ ಕಲ್ಪಿಸಿಲ್ಲ ಎಂದು ಆರೋಪಿಸಿ ಗ್ರಾಮದ ಸರ್ವೆ ನಂಬರ್ 15 ಮತ್ತು ಚಿಕ್ಕಮಾಡಾಳ್ ಗ್ರಾಮದ ಸರ್ವೆ ನಂಬರ್ 44 ರಲ್ಲಿ ಗ್ರಾಮದ ಬಡವರ್ಗದವರು ಈಚೆಗೆ ತಾತ್ಕಾಲಿಕವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದರು.
ಈ ಸಂಬಂಧ ಶುಕ್ರವಾರ ತಹಶೀಲ್ದಾರ್ ಎನ್.ಜೆ. ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಾತ್ಕಾಲಿಕವಾಗಿ ನಿರ್ಮಿಸಿರುವ ಗುಡಿಸಲುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.
‘ನಿವೇಶನ ಅಗತ್ಯವಿರುವ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ ನಿವೇಶನ ಮಂಜೂರು ಮಾಡಲು ಶ್ರಮಿಸಲಾಗುವುದು’ ತಹಶೀಲ್ದಾರ್ ಹೇಳಿದರು.
ಗ್ರಾಮ ಲೆಕ್ಕಾಧಿಕಾರಿ ದೊಡ್ಡ ಬಸವರಾಜ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಶ್ಮಿ, ಸಿಪಿಐ ಕೆ.ಎನ್. ರವೀಶ್, ಜಗದೀಶ್, ಗ್ರಾಮಸ್ಥರಾದ ಯೋಗೇಶ್ವರಪ್ಪ, ಲೋಕೇಶ್, ಹನುಮಂತಪ್ಪ, ಪ್ರವೀಣ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.