
ದಾವಣಗೆರೆ: ಇಲ್ಲಿನ ಡೆಂಟಲ್ ಕಾಲೇಜು ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 421 ಯುವಜನರು ಉದ್ಯೋಗ ಪಡೆದರು. 555 ಅಭ್ಯರ್ಥಿಗಳು 2ನೇ ಹಂತದ ಸಂದರ್ಶನಕ್ಕೆ ಅರ್ಹತೆ ಗಿಟ್ಟಿಸಿಕೊಂಡರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರ ಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ 1,944 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.
ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಎಸ್ಎಸ್ಎಲ್ಸಿ, ಪಿಯುಸಿ ಸೇರಿದಂತೆ ವಿವಿಧ ಕೋರ್ಸ್ ಪೂರ್ಣಗೊಳಿಸಿದವರು ಉದ್ಯೋಗ ಮೇಳಕ್ಕೆ ಆಗಮಿಸಿದ್ದರು. ರಾಜ್ಯದ ವಿವಿಧೆಡೆಯ 50ಕ್ಕೂ ಹೆಚ್ಚು ಕಂಪನಿಗಳು ಬಂದಿದ್ದವು. ಉದ್ಯೋಗ ಅರಸಿ 61 ಅಂಗವಿಕಲರು ಆಗಮಿಸಿದ್ದರು.
ಹೆಸರು ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳು ಉದ್ಯೋಗದಾತರ ಬಳಿಗೆ ಹಾಜರಾದರು. ಸ್ವವಿವರಗಳನ್ನು ಒದಗಿಸಿ ಆಸೀನರಾದರು. ಇದನ್ನು ಪರಿಶೀಲಿಸಿದ ಕಂಪನಿಗಳ ಸಿಬ್ಬಂದಿ ಸಂದರ್ಶನಕ್ಕೆ ಆಹ್ವಾನ ನೀಡಿದರು. ಕೌಶಲ ಹೊಂದಿದ ಹಾಗೂ ಅರ್ಹರನ್ನು ಆಯ್ಕೆ ಮಾಡಿಕೊಂಡರು. ಮೊದಲ ಹಂತದಲ್ಲಿ ಸ್ಥಳದಲ್ಲೇ ಅನೇಕರಿಗೆ ನೇಮಕಾತಿ ಪ್ರಮಾಣ ಪತ್ರ ವಿತರಿಸಲಾಯಿತು.
‘ಪದವಿ ಪೂರ್ಣಗೊಳಿಸಿದ ಮಾತ್ರಕ್ಕೆ ಉದ್ಯೋಗ ಸಿಗದು. ಶಿಕ್ಷಣದ ಜೊತೆಗೆ ಕೌಶಲಗಳನ್ನು ಕಲಿಯಬೇಕು. ಇದು ಈ ಹೊತ್ತಿನ ತುರ್ತು ಅಗತ್ಯ’ ಎಂದು ಉದ್ಯೋಗ ಮೇಳ ಉದ್ಘಾಟಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
‘ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೊಮಾ ಪೂರೈಸಿದವರು ಸೌಲಭ್ಯ ಪಡೆಯುತ್ತಿದ್ದಾರೆ. ಇವರಲ್ಲಿ 2,326 ಯುವಜನರಿಗೆ ಉದ್ಯೋಗ ದೊರತಿದೆ. ಪದವಿ ಉತ್ತೀರ್ಣರಾದವರು ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ’ ಎಂದರು.
‘ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ಸಂದರ್ಶನವನ್ನು ಸರಿಯಾಗಿ ಎದುರಿಸಬೇಕು. ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಳ್ಳಬೇಕು. ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯ ಬೆಳೆಸಿಕೊಳ್ಳಬೇಕು. ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಜನರಿಗೆ ಹೆಚ್ಚು ಲಾಭ ದೊರೆಯಲಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.
‘ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು’ ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕವಾಗಿ ಮಾತನಾಡಿದರು. ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜ ಶಾಮನೂರು, ಉಪಾಧ್ಯಕ್ಷ ಮಂಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.