ADVERTISEMENT

ನಾಗಮೋಹನದಾಸ್‌ ಆಯೋಗದ ವರದಿ ವಿರುದ್ಧ ಛಲವಾದಿ ಸಮುದಾಯದ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನದಾಸ್‌ ಆಯೋಗದ ವರದಿ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2025, 6:51 IST
Last Updated 15 ಆಗಸ್ಟ್ 2025, 6:51 IST
ದಾವಣಗೆರೆಯ ಅಂಬೇಡ್ಕರ್‌ ವೃತ್ತದಲ್ಲಿ ಜಿಲ್ಲಾ ಛಲವಾದಿ ಮಹಾಸಭಾದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು
ದಾವಣಗೆರೆಯ ಅಂಬೇಡ್ಕರ್‌ ವೃತ್ತದಲ್ಲಿ ಜಿಲ್ಲಾ ಛಲವಾದಿ ಮಹಾಸಭಾದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು   

ದಾವಣಗೆರೆ: ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಆಯೋಗವು ಪರಿಶಿಷ್ಟ ಜಾತಿಯಲ್ಲಿ ಸಂಗ್ರಹಿಸಿದ ದತ್ತಾಂಶದಲ್ಲಿ ಸಾಕಷ್ಟು ಲೋಪಗಳಿದ್ದು, ಛಲವಾದಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಜಿಲ್ಲಾ ಛಲವಾದಿ ಮಹಾಸಭಾದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಆಯೋಗದ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಘೋಷಣೆ ಮಾಡಿದರು. ಅನ್ಯಾಯ ಸರಿಪಡಿಸದ ಹೊರತು ಒಳಮೀಸಲಾತಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಲಾಗಿದೆ. ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಅತ್ಯಂತ ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಉದ್ದೇಶ ಪೂರ್ವಕವಾಗಿ ಕಡಿಮೆ ಮಾಡಲಾಗಿದೆ. ಜಾತಿಯೇ ಅಲ್ಲದ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮುದಾಯಕ್ಕೆ ನಿಗದಿಪಡಿಸಿದ ಶೇ 1ರಷ್ಟು ಮೀಸಲಾತಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ADVERTISEMENT

‘ನಾಗಮೋಹನ್‌ದಾಸ್ ವರದಿಯನ್ನು ಬೀದಿಯಲ್ಲಿ ಕುಳಿತು ರಚಿಸಲಾಗಿದೆ. ಇದು ಪಕ್ಷಪಾತದಿಂದ ಕೂಡಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಬಲಗೈ ಸಮುದಾಯದಲ್ಲಿನ ಮೂಲ ಉಪಜಾತಿಗಳನ್ನು ಒಂದೇ ಗುಂಪಿನಡಿ ಗುರುತಿಸಿಲ್ಲ. ಕೆಲವರನ್ನು ಶೇ 1 ಮೀಸಲಾತಿ ಗುಂಪಿಗೆ ಸೇರಿಸಿ ಅನ್ಯಾಯ ಮಾಡಲಾಗಿದೆ’ ಎಂದು ಜಿಲ್ಲಾ ಛಲವಾದಿ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರುದ್ರಮುನಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾಸಭಾ ಮುಖಂಡರಾದ ಎಚ್.ಕೆ. ಬಸವರಾಜ್, ಜಯಪ್ರಕಾಶ್, ಎ.ಡಿ. ಕೊಟ್ರಬಸಪ್ಪ, ಚನ್ನಗಿರಿ ನಾಗರಾಜ್, ರುದ್ರಮ್ಮ, ಲೋಕೇಶ್, ನವಿಲೇಹಾಳ್ ಹಾಲೇಶಪ್ಪ ಹಾಜರಿದ್ದರು.

ಪರೈಯ್ಯ ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿದ್ದು ದುರುದ್ದೇಶದಿಂದ ಕೂಡಿದೆ. ಈ ಉಪಜಾತಿಗಳನ್ನು ಬಲಗೈ ಗುಂಪಿಗೆ ಸೇರಿಸಬೇಕು
ಶೇಖರಪ್ಪ ಗೌರವಾಧ್ಯಕ್ಷ ಛಲವಾದಿ ಮಹಾಸಭಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.