
ದಾವಣಗೆರೆ: ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತ್ಯೇಕ ಸಭೆಗಳನ್ನು ನಡೆಸುವುದು ಸರಿಯಲ್ಲ. ಇಂತಹ ಗುಂಪುಗಾರಿಕೆ ಕಾಂಗ್ರೆಸ್ನಲ್ಲಿ ಬಹುದಿನ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ನಾಯಕರು ನಡೆಸುತ್ತಿರುವ ಪ್ರತ್ಯೇಕ ಸಭೆಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ಉಪಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಇಂತಹ ಸಂದರ್ಭದಲ್ಲಿ ಪ್ರತ್ಯೇಕ ಸಭೆ, ಸಮಾರಂಭಗಳನ್ನು ನಡೆಸುವುದು ಅನಗತ್ಯ. ಇದೇ ರೀತಿಯ ಸಭೆಗಳನ್ನು ನಡೆಸಲು ಉಳಿದವರಿಗೂ ಬರುತ್ತದೆ. ಆದರೆ, ಇದು ಗುಂಪುಗಾರಿಕೆ ಮಾಡಿದಂತೆ ಆಗುತ್ತದೆ’ ಎಂದರು.
‘ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ. ಕ್ಷೇತ್ರದ ಗೆಲುವಿಗೆ ಸಂಬಂಧಿಸಿದಂತೆ ಪೂರಕ ಮಾಹಿತಿಗಳನ್ನು ಇಟ್ಟುಕೊಂಡು ಚರ್ಚಿಸಬೇಕು. ಈ ಮೂಲಕ ಪರಿಹಾರ ಕಂಡುಕೊಳ್ಳುವುದು ಸೂಕ್ತ. ಉಪಚುನಾವಣೆಯ ಕುರಿತು ಕುಟುಂಬ ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಪುತ್ರ ಸಮರ್ಥ್ ಶಾಮನೂರು ಅಭಿಪ್ರಾಯವನ್ನೂ ಕೇಳಲಾಗುವುದು’ ಎಂದು ನುಡಿದರು.
ಉಪಚುನಾವಣೆಗಿಂತ ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವಕ್ಕೆ ಆದ್ಯತೆ. ಜಾತ್ರೆಯ ಬಳಿಕ ಚರ್ಚಿಸಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಲಾಗುವುದುಎಸ್.ಎಸ್.ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.