ದಾವಣಗೆರೆ: ಇಲ್ಲಿನ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೊಬ್ಬ ಶನಿವಾರ ಪತ್ನಿಗೆ ಚಾಕು ಇರಿದಿದ್ದಾನೆ.
ಜಾಲಿನಗರದ ನಿವಾಸಿ ಪ್ರವೀಣಕುಮಾರ್, ಪತ್ನಿ ಪದ್ಮಾ ಅವರ ಹೊಟ್ಟೆ ಹಾಗೂ ಕೈಕಾಲುಗಳಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ವಿವಾಹ ವಿಚ್ಛೇದನ ಕೋರಿದ್ದ ದಂಪತಿ, ವಿಚಾರಣೆಗಾಗಿ ನ್ಯಾಯಾಲಯಕ್ಕೆ ಬಂದಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಪದ್ಮಾ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
‘4 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ 3 ವರ್ಷದ ಮಗು ಇದೆ. ಒಂದು ವರ್ಷದಿಂದ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಪದ್ಮಾ, ವಿಚ್ಛೇದನ ಬಯಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದರಿಂದ ಕೆರಳಿದ್ದ ಪ್ರವೀಣ ಕೊಲೆಗೆ ಯತ್ನಿಸಿದ್ದಾನೆ. ಈ ಹಿಂದೆಯೂ ಆತ ಕೊಲೆಗೆ ಯತ್ನಿಸಿದ್ದ’ ಎಂದು ಪದ್ಮಾ ಸಂಬಂಧಿಕರು ದೂರಿದರು.
ಇಲ್ಲಿನ ಬಡಾವಣೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.