ADVERTISEMENT

ಜಿ.ಎಂ. ಸಿದ್ದೇಶ್ವರ ವಿರುದ್ಧ ಹರಿಹಾಯ್ದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 5:53 IST
Last Updated 16 ಆಗಸ್ಟ್ 2025, 5:53 IST
ಎಸ್‌.ಎಸ್‌. ಮಲ್ಲಿಕಾರ್ಜುನ್‌
ಎಸ್‌.ಎಸ್‌. ಮಲ್ಲಿಕಾರ್ಜುನ್‌   

ದಾವಣಗೆರೆ: ನಾಲ್ಕೈದು ಬಾರಿ ಸಂಸದರಾಗಿ ಆಯ್ಕೆ ಆಗಿರುವುದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿರುವ ಕೇಂದ್ರದ ಮಾಜಿ ಸಚಿವರು (ಜಿ.ಎಂ.ಸಿದ್ದೇಶ್ವರ) ಜಿಲ್ಲೆಯ ಅಭಿವೃದ್ಧಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪ್ರಶ್ನಿಸಿದರು.

‘ಸ್ಮಾರ್ಟ್‌ ಸಿಟಿ, ಕಸ ವಿಲೇವಾರಿ ಘಟಕ ಸೇರಿದಂತೆ ಹಲವು ಯೋಜನೆಗಳನ್ನು ಪ್ರಸ್ತಾಪಿಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸ್ಮಾರ್ಟ್‌ಸಿಟಿ ಯೋಜನೆಗೆ ದಾವಣಗೆರೆ ಸೇರ್ಪಡೆಯಾಗಿದ್ದು ಹೇಗೆ ಎಂಬುದನ್ನು ಅವರು ಮರೆತಿರುವಂತೆ ಕಾಣುತ್ತಿದೆ. ಕಸ ವಿಲೇವಾರಿ ಘಟಕದ ಪರಿಕಲ್ಪನೆ ಕೂಡ ಅವರದ್ದಲ್ಲ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.

‘ಅಶೋಕ ಚಿತ್ರಮಂದಿರದ ಸಮೀಪದಲ್ಲಿ ರೈಲ್ವೆ ಹಳಿಗೆ ನಿರ್ಮಿಸಿದ ಕೆಳಸೇತುವೆ ಕಾಮಗಾರಿಯೇ ಅವರ (ಸಿದ್ದೇಶ್ವರ) ಅವೈಜ್ಞಾನಿಕ ಯೋಜನೆಗೆ ಹಿಡಿದ ಕೈಗನ್ನಡಿ. ಇದಕ್ಕೆ ಪರ್ಯಾಯವಾಗಿ ಮತ್ತೊಂದು ಸೇತುವೆ ನಿರ್ಮಾಣಕ್ಕೆ ಪ್ರಯತ್ನ ನಡೆಯುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

‘ಜಿಲ್ಲಾ ಕಾರಾಗೃಹವನ್ನು ತುರ್ಚಘಟ್ಟ ಸ್ಥಳಾಂತರಿಸುವ ಆಲೋಚನೆ ಇದೆ. ಆಗ ಲಭ್ಯವಾಗುವ ವಿಶಾಲ ಸ್ಥಳದಲ್ಲಿ ಉಪನೋಂದಣಾಧಿಕಾರಿ ಕಚೇರಿ ಹಾಗೂ ಸರ್ವೆ ಇಲಾಖೆಗೆ ಕಟ್ಟಡ ನಿರ್ಮಿಸುವ ಯೋಜನೆ ಇದೆ. ತಹಶೀಲ್ದಾರ್‌ ಕಚೇರಿಯೂ ಇಲ್ಲಿಯೇ ಇರುವುದರಿಂದ ಜನರಿಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

‘ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಮರುನಿರ್ಮಾಣ ಮಾಡಲಾಗುತ್ತಿದೆ. ವೈದ್ಯಕೀಯ ಸಿಬ್ಬಂದಿಯ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತಿದೆ. ಹೃದ್ರೋಗ ಸೇರಿ ಇತರ ತಜ್ಞರ ಅಲಭ್ಯತೆ ಇದ್ದಾಗ ಮಾತ್ರ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ. ಔಷಧಕ್ಕೆ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಟ್ರಾಮಾ ಕೇರ್ ಸೆಂಟರ್‌ ಕಾರ್ಯಾರಂಭಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.

‘2010ರಲ್ಲಿ ನಡೆದ ಅಕ್ರಮ ಗಣಿಗಾರಿಕೆ ಹಾಗೂ ಅಕ್ರಮ ಅದಿರು ಸಾಗಣೆಗೆ ಸಂಬಂಧಿಸಿದಂತೆ ಸಚಿವ ಎಚ್‌.ಕೆ. ಪಾಟೀಲ್‌ ಪತ್ರ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಏಕ ಸದಸ್ಯ ಆಯೋಗದ ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ಆಗಿರುವ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.