ADVERTISEMENT

ದಾವಣಗೆರೆ: ಬಂದ್‌ಗೆ ಉತ್ತಮ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 7:09 IST
Last Updated 8 ಡಿಸೆಂಬರ್ 2020, 7:09 IST
ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲಿಸಿ ರೈತ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್‌ ಅವರು ಅನ್ನದಾತನಿಗೆ ಅನ್ನ (ಆಹಾರ) ನೀಡುವ ಮೂಲಕ ದಾವಣಗೆರೆಯ ಹದಡಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲಿಸಿ ರೈತ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್‌ ಅವರು ಅನ್ನದಾತನಿಗೆ ಅನ್ನ (ಆಹಾರ) ನೀಡುವ ಮೂಲಕ ದಾವಣಗೆರೆಯ ಹದಡಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ನೀಡಿರುವ ಭಾರತ್‌ ಬಂದ್‌ ಕರೆಗೆ ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ ಸಿಪಿಐ, ಎಐಟಿಯುಸಿ, ಎಐಯುಟಿಯುಸಿ, ಸಿಐಟಿಯು, ನೆರಳು ಬೀಡಿ ಕಾರ್ಮಿಕರ ಸಂಘಟನೆ, ಆಮ್‌ ಆದ್ಮಿ ಪಾರ್ಟಿ, ಜನಸಕ್ತಿ, ರೈತ ಸಂಘ ಮತ್ತು ಹಸಿರುಸೇನೆ ಹೀಗೆ ವಿವಿಧ ಸಂಘಟನೆಗಳು ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಬಸ್‌ ಸಂಚಾರ ಸ್ಥಗಿತಗೊಂಡಿತು.

ಬೆಳಿಗ್ಗೆ ಚಿತ್ರದುರ್ಗಕ್ಕೆ ಹೊರಟಿದ್ದ ಬಸ್‌ ಅನ್ನು ಪ್ರತಿಭಟನಕಾರರು ಅಡ್ಡ ಹಾಕಿ ಪ್ರಯಾಣಿಕರನ್ನು ಇಳಿಸಿ, ಬಸ್‌ ಮುಂದಕ್ಕೆ ಹೋಗದಂತೆ ತಡೆದರು. ಹದಡಿ ರಸ್ತೆಯಲ್ಲಿ ರೈತ ಸಂಘ ಹುಚ್ಚವ್ವನಹಳ್ಳಿ ಬಣದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ಮಾಡಲಾಯಿತು.

ADVERTISEMENT

ರೈತ ಮುಖಂಡ ತೇಜಸ್ವಿ ಪಟೇಲ್‌ ನೇತೃತ್ವದ ತಂಡ ಜನರಿಗೆ ಊಟದ ಪ್ಯಾಕೆಟ್‌ ಹಂಚುವ ಮೂಲಕ ‘ಅನ್ನ ತಿನ್ನುವವರು ಎಲ್ಲರೂ ಈ ಬಂದ್‌ಗೆ ಬೆಂಬಲ ನೀಡಬೇಕು’ ಎಂದು ಸಾರುತ್ತಾ ನಗರದಾದ್ಯಂತ ಸಂಚರಿಸಿತು.

ಕೆ.ಜಿ. ಯಲ್ಲಪ್ಪ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆ ಸಂಘಟನೆಗಳು ಜಯದೇವ ಸರ್ಕಲ್‌ನಲ್ಲಿ ಧರಣಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದವು.

ಕಾಂಗ್ರೆಸ್‌ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಯಿತು. ಬಹುತೇಕ ಅಂಗಡಿ, ಹೋಟೆಲ್‌ಗಳನ್ನು ಜನರು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿ ಬೆಂಬಲ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.