
ಸೈಬರ್ ವಂಚನೆ
ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಪಡೆಯಬಹುದು ಎಂಬ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ₹ 76.43 ಲಕ್ಷ ವಂಚನೆ ಮಾಡಲಾಗಿದೆ.
ನಗರದ ವಿನಾಯಕ ಬಡಾವಣೆಯ ವ್ಯಕ್ತಿ ವಂಚನೆಗೆ ಒಳಗಾದವರು. ಫೇಸ್ಬುಕ್ ಮೂಲಕ ಪರಿಚಿತನಾದ ವ್ಯಕ್ತಿಯನ್ನು ನಂಬಿ ಹಣ ಕಳೆದುಕೊಂಡಿದ್ದಾರೆ.
‘ಸಾಮಾಜಿಕ ಜಾಲತಾಣದಲ್ಲಿ ಪರಿಚಿತವಾದ ವ್ಯಕ್ತಿ ಸ್ನೇಹದಿಂದ ವರ್ತಿಸಿದ್ದಾನೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಪಡೆಯಬಹುದು ಎಂಬ ಆಮಿಷ ತೋರಿಸಿದ್ದಾನೆ. ವಾಟ್ಸ್ಆಪ್ ಮೂಲಕ ಸಂಪರ್ಕ ಸಾಧಿಸಿ ಹಣ ಹೂಡಿಕೆ ಮಾಡಿಸಿಕೊಂಡಿದ್ದನು’ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ನಿಂದ ಡಿಸೆಂಬರ್ ನಡುವೆ ವಿವಿಧ ಬ್ಯಾಂಕ್ ಖಾತೆಗಳಿಗೆ 10 ಬಾರಿ ಹಣ ವರ್ಗಾವಣೆ ಮಾಡಲಾಗಿದೆ. ಹೂಡಿಕೆ ಮಾಡಿದ ಹಣವನ್ನು ಕೆಲ ದಿನ ಬಿಟ್ಟು ಹಿಂಪಡೆಯಲು ಪ್ರಯತ್ನಿಸಿದಾಗ ವಂಚನೆಯ ಜಾಲಕ್ಕೆ ಸಿಲುಕಿದ್ದು ಖಚಿತವಾಗಿದೆ. ಈ ಸಂಬಂಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.