ADVERTISEMENT

ದಾವಣಗೆರೆ ದಕ್ಷಿಣ ಕಾಂಗ್ರೆಸ್‌ ಟಿಕೆಟ್ ಮುಸ್ಲಿಮರಿಗೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 3:01 IST
Last Updated 15 ಫೆಬ್ರುವರಿ 2026, 3:01 IST
ದಾವಣಗೆರೆಯ ತಾಜ್ ಪ್ಯಾಲೇಸ್‌ನಲ್ಲಿ ನಡೆದ ಜಿಲ್ಲಾ ಮುಸ್ಲಿಂ ಮುಖಂಡರ ಸಮಾವೇಶದಲ್ಲಿ ಕೆ.ಅಬ್ದುಲ್ ಜಬ್ಬಾರ್ ಸಾಬ್ ಮಾತನಾಡಿದರು
ದಾವಣಗೆರೆಯ ತಾಜ್ ಪ್ಯಾಲೇಸ್‌ನಲ್ಲಿ ನಡೆದ ಜಿಲ್ಲಾ ಮುಸ್ಲಿಂ ಮುಖಂಡರ ಸಮಾವೇಶದಲ್ಲಿ ಕೆ.ಅಬ್ದುಲ್ ಜಬ್ಬಾರ್ ಸಾಬ್ ಮಾತನಾಡಿದರು   

ದಾವಣಗೆರೆ: ‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’ ಎಂದು ಮುಸ್ಲಿಂ ಸಮುದಾಯದ ಮುಖಂಡರು ಒಮ್ಮತದಿಂದ ಆಗ್ರಹಿಸಿದರು. 

ನಗರದ ತಾಜ್ ಪ್ಯಾಲೇಸ್‌ನಲ್ಲಿ ಶನಿವಾರ ನಡೆದ ಜಿಲ್ಲಾ ಮುಸ್ಲಿಂ ಮುಖಂಡರ ಸಮಾವೇಶದಲ್ಲಿ ಭಾಗವಹಿಸಿದ್ದ ಮುಸ್ಲಿಂ ಸಮುದಾಯದ, ವಿವಿಧ ಪಕ್ಷಗಳ ಮುಖಂಡರು, ಧಾರ್ಮಿಕ ಮುಖಂಡರು, ವಿವಿಧ ಸಂಘ –ಸಂಸ್ಥೆಗಳ ಪದಾಧಿಕಾರಿಗಳು ‘ಈ ಬಾರಿ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಪಡೆಯಲು ಎಲ್ಲಾ ರೀತಿಯ ಪ್ರಯತ್ನ ನಡೆಸಬೇಕು’ ಎಂದು ಪ್ರತಿಪಾದಿಸಿದರು. 

ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಸಾಬ್ ಮಾತನಾಡಿ, ‘ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಅಹಿಂದ ಮತಗಳ ಬೆಂಬಲ ಸಿಗಲಿದೆ. ಒಂದೇ ಕುಟುಂಬಕ್ಕೆ ಟಿಕೆಟ್ ನೀಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದರು.‌ 

ADVERTISEMENT

‘ಶಾಮನೂರು ಶಿವಶಂಕರಪ್ಪ ಅವರನ್ನು ಮುಸ್ಲಿಂ ಸಮುದಾಯ ನಿರಂತರವಾಗಿ ಗೆಲ್ಲಿಸಿಕೊಂಡು ಬಂದಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿರುವ ಮುಸ್ಲಿಂ ಸಮುದಾಯವನ್ನು ಶಾಮನೂರು ಕುಟುಂಬ ಬೆಂಬಲಿಸಬೇಕು’ ಎಂದು ಹೇಳಿದರು. 

‘ಈ ಚುನಾವಣೆಯಲ್ಲಿ ಸಾಧ್ಯವಾಗದಿದ್ದರೆ, ಯಾವತ್ತೂ ನಮಗೆ ರಾಜಕೀಯ ನ್ಯಾಯ ಸಿಗಲು ಸಾಧ್ಯವಿಲ್ಲ. ಆದ್ದರಿಂದ ತಮ ತಮ್ಮ ಕಾಲೊನಿಗಳಲ್ಲಿ ಈ ಬಗ್ಗೆ ಹೆಚ್ಚು ಹೆಚ್ಚು ಚರ್ಚೆ ನಡೆಸಿ’ ಎಂದು ಸೂಚಿಸಿದರು. 

‘ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಮುಸ್ಲೀಮರಿಗೆ ನೀಡದಿದ್ದರೆ, ಮುಂದಿನ ಯಾವ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಬೆಂಬಲ ನೀಡುವುದಿಲ್ಲ ಎಂದು ಸಮುದಾಯದವರು ಪಟ್ಟು ಹಿಡಿಯಬೇಕು’ ಎಂದು ಜೆಡಿಎಸ್ ಮುಖಂಡ ಜೆ.ಅಮನುಲ್ಲಾ ಖಾನ್ ಸಲಹೆ ನೀಡಿದರು. 

‘ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಬೆಂಬಲವಿಲ್ಲದೇ ಕಾಂಗ್ರೆಸ್ ಗೆಲುವು ಸಾಧ್ಯವಿಲ್ಲ. ಸಮುದಾಯದ ಯಾರಿಗೇ ಟಿಕೆಟ್ ನೀಡಿದರೂ, ಮುಸ್ಲಿಂ ಸಮುದಾಯ ಒಗ್ಗಟ್ಟಿನಿಂದ ಬೆಂಬಲಿಸಲಿದೆ’ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಾದಿಕ್ ಪೈಲ್ವಾನ್ ಹೇಳಿದರು. 

ಎಐಎಂಐಎಂ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಹಮ್ಮದ್ ಅಲಿ ಶೋಯೇಬ್ ಮಾತನಾಡಿ, ‘ಉಪ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ, ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಹೈದರಾಬಾದ್‌ನ ಸಂಸದ ಅಸಾವುದ್ದೀನ್ ಒವೈಸಿ ನಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ’ ಎಂದು ಎಚ್ಚರಿಸಿದರು. 

ಮುಸ್ಲಿಂ ಒಕ್ಕೂಟದ ಅಬ್ದುಲ್ ಘನಿ ತಾಹಿರ್, ಜೆಡಿಎಸ್‌ನ ಟಿ.ಅಸ್ಗರ್, ಬಿಜೆಪಿಯ ಸಿ.ನಾಸೀರ್ ಅಹ್ಮದ್, ಆಮ್ ಅದ್ಮಿ ಪಕ್ಷದ ಆದಿಲ್ ಖಾನ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.