ದಾವಣಗೆರೆ: ‘ರಾಜಸ್ಥಾನದ ಉದಯಪುರದಲ್ಲಿ ಟೇಲರ್ ಕನ್ಹಯ್ಯ ಲಾಲ್ ಹತ್ಯೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಲಿದ್ದು, ಕೊಲೆ ಮಾಡಿರುವ ದುಷ್ಕರ್ಮಿಗಳಿಗೆ ಮರಣ ದಂಡನೆ ವಿಧಿಸಬೇಕು’ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆಗ್ರಹಿಸಿದರು.
‘ದೇಶ ಹೊತ್ತಿ ಉರಿಯಲು ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆಯೇ ಕಾರಣವಾಗಿದ್ದು, ಸುಪ್ರೀಂ ಕೋರ್ಟ್ ಅವರಿಗೆ ಛೀಮಾರಿ ಹಾಕಿದೆ. ಅವರ ಹೇಳಿಕೆ ಪಕ್ಷದ ನಿಲುವನ್ನು ವ್ಯಕ್ತಪಡಿಸುತ್ತಿದ್ದು, ಈವರೆಗೂ ಅವರನ್ನು ಬಂಧಿಸದಿರುವುದು ಖಂಡನೀಯ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
‘ಕಾಂಗ್ರೆಸ್ ಸೀಮಿತ ಅವಧಿಗೆ ತುರ್ತು ಪರಿಸ್ಥಿತಿ ಹೇರಿತ್ತು. ಕಳೆದ ಎಂಟು ವರ್ಷಗಳಿಂದ ದೇಶದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣವಿದೆ. ಅವರ ಆಡಳಿತದ ವಿರುದ್ಧ ಧ್ವನಿ ಎತ್ತಿದವರನ್ನು ದೇಶ ದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ’ ಎಂದು ಟೀಕಿಸಿದರು.
ನರೇಂದ್ರ ಮೋದಿ ಅವರು ಜರ್ಮನಿಯ ಪ್ರವಾಸದಲ್ಲಿದ್ದಾಗ ಭಾರತದ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. ಶೇ 40ರಷ್ಟು ಕಮಿಷನ್ ಬಗ್ಗೆ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಿಲ್ಲ’ ಎಂದು ಆರೋಪಿಸಿದರು.
ಕಾಂಗ್ರೆಸ್ ಮುಖಂಡರಾದ ಮಹ್ಮದ್ ಜಕ್ರಿಯಾ ಎಂ.ಕೆ. ಲಿಯಾಖತ್ ಅಲಿ, ಡಿ.ಶಿವಕುಮಾರ್, ಹರೀಶ್, ನಿಟುವಳ್ಳಿ ಪ್ರವೀಣ್, ಮುಬಾರಕ್, ದಾವಣಗೆರೆ ವಿಶ್ವವಿದ್ಯಾಲಯದ ಎನ್.ಎಸ್.ಯು.ಪಿನ ಅಧ್ಯಕ್ಷರಾದ ಗಿರಿಧರ್ ಸಾತಲ್ ಪತ್ರಿಕಾಗೋಷ್ಠಿಯಲ್ಲಿ
ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.