ADVERTISEMENT

ಮೋಡ ಬಿತ್ತನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 6:11 IST
Last Updated 19 ಜುಲೈ 2019, 6:11 IST
ಮೋಡ ಬಿತ್ತನೆಗಾಗಿ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ದಾವಣಗೆರೆಯ ಜಯದೇವ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಮೋಡ ಬಿತ್ತನೆಗಾಗಿ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ದಾವಣಗೆರೆಯ ಜಯದೇವ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ದಾವಣಗೆರೆ: ರಾಜ್ಯದಲ್ಲಿ ಸಮರ್ಪಕ ಮಳೆಯಾಗದ ಕಾರಣ ಬರ ಸ್ಥಿತಿ ಎದುರಾಗಿದೆ. ನೀರಿನ ಸಮಸ್ಯೆ ಹೆಚ್ಚಿದ್ದು, ಜನರು ಗುಳೆ ಹೊರಟಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮೋಡ ಬಿತ್ತನೆ ಮಾಡಲು ಮುಂದಾಗಬೇಕು ಎಂದು ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಜಯದೇವ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವೇದಿಕೆ ಪದಾಧಿಕಾರಿಗಳು, ರಾಜ್ಯ ಸರ್ಕಾರ ಕೂಡಲೇ ಮೋಡ ಬಿತ್ತನೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಸೇರಿ ರಾಜ್ಯ ಹಲವೆಡೆ ಸಮರ್ಪಕವಾಗಿ ಮಳೆಯಾಗಿಲ್ಲ. ರಾಜ್ಯದ ಅಣೆಕಟ್ಟೆಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಕೊಳವೆಬಾವಿಗಳಲ್ಲಿ ನೀರಿಲ್ಲ. ಜನ, ಜಾನುವಾರು ಪರದಾಡುವಂತಾಗಿವೆ. ಇಂತಹ ಸಮಯದಲ್ಲಿ ಜನರ ನೆರವಿಗೆ ಧಾವಿಸಬೇಕಾದ ಸರ್ಕಾರ ಮತ್ತು ವಿರೋಧ ಪಕ್ಷಗಳು ಅಧಿಕಾರಕ್ಕಾಗಿ ಕಚ್ಚಾಡುತ್ತಿವೆ ಎಂದು ದೂರಿದರು.

ಮೋಡ ಬಿತ್ತನೆ ಮಾಡುತ್ತೇವೆ ಎಂದು ಅಧಿಕಾರಿಗಳು ಸುಳ್ಳು ಭರವಸೆ ನೀಡುತ್ತಲೇ ಬಂದಿದ್ದಾರೆ. ಸರ್ಕಾರ ಜೂನ್‌ ತಿಂಗಳಲ್ಲಿ ಮೋಡ ಬಿತ್ತನೆಗೆ ಟೆಂಡರ್‌ ನೀಡಿ ಸಚಿವ ಸಂಪುಟದಲ್ಲಿ ಅನುಮೋದನೆ ಸಹ ನೀಡಿದೆ. ಆದರೂ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಅಧಿಕಾರಿಗಳು ಶೀಘ್ರ ಮೋಡ ಬಿತ್ತನೆಗೆ ಮುಂದಾಗಬೇಕು. ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ವೇದಿಕೆ ಅಧ್ಯಕ್ಷ ಕೆ.ಜಿ. ಯಲ್ಲಪ್ಪ, ಅಮ್ಜದ್‌ ಅಲಿ, ಕೆ.ಎಚ್‌. ಮೆಹಬೂಬ್‌, ದಯಾನಂದ, ಸಂತೋಷ ದೊಡ್ಡಮನಿ, ಎಂ.ರವಿ, ಗದಿಗೆಪ್ಪ, ಬಾಬುರಾವ್‌, ಪ್ರವೀಣ್‌, ಸೋಮಶೇಖರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.