ಮಲೇಬೆನ್ನೂರು: ಪ್ರಸಕ್ತ ಮಳೆಗೆ ಹೆಚ್ಚಿನ ಪ್ರಮಾಣದ ನೀರು ದೇವರಬೆಳೆಕೆರೆ ಪಿಕಪ್ ಜಲಾಶಯಕ್ಕೆ ಹರಿದು ಬರುತ್ತಿದ್ದು, ಜಲಾಶಯದ ಗೇಟುಗಳಿಗೆ ಜಲಸಸ್ಯ ಅಡ್ಡಲಾಗಿ ನಿಂತಿದ್ದು ನೀರಿನ ಹರಿವಿಗೆ ಅಡ್ಡಿಯಾಗಿದೆ.
‘ಈಗಾಗಲೇ ಎಂಜಿನಿಯರುಗಳ ಗಮನಕ್ಕೆ ಸಮಸ್ಯೆ ತಂದಿದ್ದರೂ ಯಾವುದೇ ರಕ್ಷಣಾ ಕ್ರಮ ತೆಗೆದುಕೊಂಡಿಲ್ಲ, ಒಂದು ವೇಳೆ ಅಣೆಕಟ್ಟೆಗೆ ಹಾನಿಯಾದರೆ ಯಾರು ಹೊಣೆ? ಈಗಾಗಲೇ ಒಮ್ಮೆ ಅಣೆಕಟ್ಟಿನಲ್ಲಿ ಬಿರುಕು ಮೂಡಿ ದುರಸ್ತಿ ಮಾಡಲಾಗಿದೆ’ ಎಂದು ಸಂಕ್ಲೀಪುರ, ಗುಳದಳ್ಳಿ, ಬೂದಿಹಾಳ್, ದೇವರಬೆಳಕೆರೆ, ಗ್ರಾಮದ ರೈತರು ಆತಂಕ ವ್ಯಕ್ತಪಡಿಸಿದರು.
ಎಂಜಿನಿಯರ್ಗಳು ತುರ್ತಾಗಿ ಕ್ರಮ ತೆಗೆದುಕೊಳ್ಳಬೇಕಿತ್ತು, ಅನುದಾನ ಇಲ್ಲ ಎಂದು ಕೈ ತೊಳೆದುಕೊಳ್ಳುತ್ತಿದ್ದಾರೆ. ಕರ್ನಾಟಕ ನೀರಾವರಿ ನಿಗಮದ ನಿರ್ದೇಶಕರು, ಮುಖ್ಯ ಎಂಜಿನಿಯರ್ ನಿರ್ಲಕ್ಷ್ಯ ವಹಿಸಿದ ಕಾರಣ ರೈತರು ಬೆಳೆದ ಬೆಳೆ ಜಲಾವೃತವಾಗಿದ್ದು ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಹರಿಹಾಯ್ದುರು. ಜಿಲ್ಲಾಡಳಿತ ಜನಪ್ರತಿನಿಧಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಮೂರ್ನಾಲ್ಕು ದಿನಗಳ ಬಿರುಮಳೆಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದೆ. ಈಗಲಾದರೂ ಜಲಸಸ್ಯ ತೆರವು ಮಾಡಿ ಅಣೆಕಟ್ಟಿನ ರಕ್ಷಣೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಅಪಾಯಕಾರಿ ಸನ್ನಿವೇಶದಲ್ಲಿ ಯಾವುದೇ ಸುರಕ್ಷತಾ ಕ್ರಮ ಇಲ್ಲದೇ ನೀರಗಂಟಿಗಳು ಜಲಸಸ್ಯ ತೆರವು ಮಾಡಲು ಆರಂಭಿಸಿದ್ದರೂ, ನೀರಿನ ರಭಸ ಹೆಚ್ಚಾಗಿದ್ದು ಕೆಲಸ ಆಮೆಗತಿಯಲ್ಲಿ ಸಾಗಿದೆ.
.............
ಸರ್ಕಾರ ಡಿ.ಬಿ. ಕೆರೆ ಪಿಕಪ್ ಗೇಟ್ ದುರಸ್ತಿ ಮಾಡಲು ಹಣ ಬಿಡುಗಡೆ ಮಾಡಿದ್ದರೂ ಕಾಮಗಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ.
-ಸಿ. ನಾಗೇಂದ್ರಪ್ಪ, ರೈತ ಮುಖಂಡ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.