ದಾವಣಗೆರೆ: ಮಂಡಕ್ಕಿ ಭಟ್ಟಿ ಪ್ರದೇಶದಲ್ಲಿ ರಸ್ತೆಯಲ್ಲಿ ಹೋಗುತ್ತಿರುವವರನ್ನೆಲ್ಲ ನಿಲ್ಲಿಸಿ ಕೋವಿಡ್ ಲಸಿಕೆ ತೆಗೆದುಕೊಂಡಿದ್ದಾರೋ ಇಲ್ಲವೋ ಎಂಬುದನ್ನು ತಿಳಿದುಕೊಂಡು, ಪಡೆಯದವರಿಗೆ ರಸ್ತೆಯಲ್ಲೇ ಲಸಿಕೆ ನೀಡಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ನೇತೃತ್ವದಲ್ಲಿ ಬುಧವಾರ ಈ ಅಭಿಯಾನ
ನಡೆಸಲಾಗಿದೆ.
ಮಂಡಕ್ಕಿ ಭಟ್ಟಿಯ ಒಳಗೆ ಹೋಗಿ ತಪ್ಪಿಸಿಕೊಳ್ಳಲು ಯತ್ನಿಸಿದವರಿಗೂ ಲಸಿಕೆ ನೀಡಲಾಯಿತು. ಅಧಿಕಾರಿಗಳು ಮಂಡಕ್ಕಿ ಭಟ್ಟಿಯೊಳಗೆ ಹೊಕ್ಕಿ ಅಲ್ಲಿದ್ದ ಎಲ್ಲರಿಗೂ ಲಸಿಕೆ ನೀಡಿದರು. ಲಸಿಕೆ ಉಸ್ತುವಾರಿ ಹೊತ್ತಿರುವ ಡಾ. ಕೆ.ಎಸ್. ಮೀನಾಕ್ಷಿ ಅವರೇ ಸೂಜಿ ಚುಚ್ಚಿದರು.
ಇದೇ ತಂಡವು ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳನ್ನು ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಕರಿಗೆ ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸಿತು. ಮಾಸ್ಕ್ ಹಾಕದೇ ಇದ್ದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಪಾಲಿಕೆ ಸದಸ್ಯ ಎ.ಬಿ.ರಹೀಂ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಗಂಗಾಧರ, ಆಜಾದ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ಸಾಥ್ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.