
ಬಸವರಾಜು ಶಿವಗಂಗಾ
ದಾವಣಗೆರೆ: ‘ಸಂಕ್ರಾಂತಿಗೆ ಸೂರ್ಯಪಥ ಬದಲಾವಣೆ ಆದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪಥವೂ ದೆಹಲಿ ಕಡೆ ಬದಲಾವಣೆ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಡೆ ಪಥ ಬದಲಾವಣೆ ಮಾಡಿದೆ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಹೇಳಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7.5 ವರ್ಷ ಅಧಿಕಾರ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಎರಡು ವರ್ಷ ಮುಖ್ಯಮಂತ್ರಿ ಆಗಲಿ ಎಂಬುದು ನಮ್ಮ ಆಶಯ. ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆ ಇದೆ’ ಎಂದು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಹೈಕಮಾಂಡ್ ಸಮಯ ನೀಡಿರುವುದು ಉತ್ತಮ ಬೆಳವಣಿಗೆ. ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಅವರ ಶ್ರಮ ಜಾಸ್ತಿ ಇದೆ. ಅವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ’ ಎಂದರು.
‘ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರಾ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಚಿವ ಸಂಪುಟ ಬದಲಾವಣೆಗೆ ಆಗುತ್ತದೆ. ಹೊಸಬರಿಗೆ ಅವಕಾಶ ಸಿಕ್ಕರೆ ಒಳ್ಳೆಯದು. ಹೊಸಬರಿಗೆ ಅವಕಾಶ ನೀಡಿದರೆ ಆಡಳಿತದಲ್ಲಿ ಬದಲಾವಣೆ ಆಗುತ್ತದೆ. ಯಾವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.