
ದಾವಣಗೆರೆ: ‘ಅಧಿಕಾರ ಹಸ್ತಾಂತರ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಹಿನ್ನಡೆಯಾಗುತ್ತಿಲ್ಲ. ಬದಲಿಗೆ, ಅವರಿಗೆ ಪೂರಕವಾದ ವಾತಾವರಣವೇ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ಎಲ್ಲವೂ ಬಗೆಹರಿಯಲಿದೆ’ ಎಂದು ಚನ್ನಗಿರಿಯ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರ ಹಸ್ತಾಂತರದ ಗೊಂದಲದ ಬಗ್ಗೆ ಎಲ್ಲರೂ ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲವನ್ನು ಹೈಕಮಾಂಡ್ ತಕ್ಷಣವೇ ಬಗೆಹರಿಸಬೇಕು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ’ ಎಂದರು.
‘ಶೀಘ್ರವೇ ನಿರ್ಧಾರ ಕೈಗೊಳ್ಳದಿದ್ದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟ’ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಯಲ್ಲಿ ಅರ್ಥವಿದೆ. ‘ಬಿಜೆಪಿ ಆಡಳಿತದ ಅವಧಿಯಲ್ಲಿನ ಕುರ್ಚಿ ಕಿತ್ತಾಟದಿಂದ ಬೇಸತ್ತ ಜನ ಕಾಂಗ್ರೆಸ್ ಕಡೆ ಒಲವು ತೋರಿದ್ದರು ಎಂಬುದನ್ನು ನಾವು ಮರೆಯಬಾರದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.