
ಜಗಳೂರು: ತಾಲ್ಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ 17 ವರ್ಷಗಳ ನಂತರ ನಡೆಯುತ್ತಿರುವ ದುರ್ಗಾಂಭಿಕಾ ಜಾತ್ರೆಯ ಎರಡನೇ ದಿನವಾದ ಬುಧವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮೀಸಲು ಅರ್ಪಿಸುವುದು ಹಾಗೂ ಹರಕೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
ಶಾಸಕ ಬಿ. ದೇವೇಂದ್ರಪ್ಪ ಅವರ ಸ್ವಗ್ರಾಮ ಚಿಕ್ಕಮ್ಮನಹಟ್ಟಿ ಗ್ರಾಮಕ್ಕೆ ಜಾತ್ರೆಯ ಅಂಗವಾಗಿ ಸಚಿವರು, ಸಂಸದರು ಹಾಗೂ ಶಾಸಕರು ಮತ್ತು ಕಾಂಗ್ರೆಸ್ ಮುಖಂಡರು ಪಾಲ್ಗೊಂಡು ಭಕ್ತಿಯನ್ನು ಸಮರ್ಪಿಸಿದರು.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಕಂಪ್ಲಿ ಶಾಸಕ ಗಣೇಶ್, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮಾಯಕೊಂಡ ಶಾಸಕ ಬಸಂತಪ್ಪ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ ಅವರು ದುರ್ಗಾಂಭಿಕಾ ದೇವಿಯ ದರ್ಶನ ಪಡೆದರು.
ಗ್ರಾಮದಲ್ಲಿ ₹ 3.75 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಿರುವ ಕೆರೆಯಲ್ಲಿ ಸಚಿವ ಜಮೀರ್ ಅಹ್ಮದ್, ಶಾಸಕ ಬಿ. ದೇವೇಂದ್ರಪ್ಪ, ಕಂಪ್ಲಿ ಶಾಸಕ ಗಣೇಶ್ ಹಾಗೂ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ದೋಣಿ ವಿಹಾರ ನಡೆಸಿದರು.
ಗೋಕಟ್ಟೆ ಸ್ಥಳದಲ್ಲಿ 57 ಕೆರೆ ತುಂಬಿಸುವ ಯೋಜನೆಯಡಿ ಚಿಕ್ಕಮ್ಮನಹಟ್ಟಿ ಕೆರೆಗೆ ನೀರು ತುಂಬಿಸಿ, ಸುಂದರವಾದ ವಾಯುವಿಹಾರ ಪಥ, ಸುರಕ್ಷತಾ ಗ್ರಿಲ್ಸ್ ಹಾಗೂ ಸಾಲು ದೀಪಗಳ ಅಳವಡಿಸಿರುವುದಕ್ಕೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ಬಿ. ದೇವೇಂದ್ರಪ್ಪ ಅವರು ಕೆರೆ ಪಕ್ಕದಲ್ಲಿ 10 ಎಕರೆ ಪ್ರದೇಶದಲ್ಲಿ ವಿಶಾಲವಾದ ಪೆಂಡಾಲ್ ನಿರ್ಮಿಸಿ ಜಾತ್ರೆಗೆ ಆಗಮಿಸುವ ಭಕ್ತರು ಹಾಗೂ ಗಣ್ಯರಿಗೆ ವಿಶೇಷ ಊಟದ ವ್ಯವಸ್ಥೆ ಮಾಡಿದ್ದರು. ಮಧ್ಯಾಹ್ನ 12 ಗಂಟೆಯಿಂದ ಸಂಜೆಯವರೆಗೆ ಸಾವಿರಾರು ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.