
ಕಡರನಾಯ್ಕನಹಳ್ಳಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲ. ಅವರ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು, ಪ್ರೋತ್ಸಾಹ ನೀಡಿದರೆ ಉತ್ತಮ ಸಾಧನೆ ಮಾಡುತ್ತಾರೆ’ ಎಂದು ಡಿವೈಎಸ್ಪಿ ಪ್ರಕಾಶ್ ಹೇಳಿದರು.
ಸಮೀಪದ ಜಿಟಿ ಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಗ್ರಾಮದ ಪೋಷಕರು ಸರ್ಕಾರಿ ಶಾಲೆ ಎಂಬ ಅಸಡ್ಡೆ ತೋರದೆ, ಮಾದರಿ ಶಾಲೆಯನ್ನಾಗಿ ರೂಪಿಸಿರುವುದು ಶ್ಲಾಘನೀಯ’ ಎಂದರು.
‘ಸರ್ಕಾರಿ ಶಾಲೆಗಳಲ್ಲಿ ಕಲಿತವರು ಮಹಾನ್ ಸಾಧನೆ ಮಾಡಿದ್ದಾರೆ. ಈ ಶಾಲೆಯನ್ನು ಉನ್ನತೀಕರಿಸಿದ ಶಾಲೆಯನ್ನಾಗಿಸುವ ಜವಾಬ್ದಾರಿ ಗ್ರಾಮಸ್ಥರ ಮೇಲಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ಚಂದ್ರಪ್ಪ ಹೇಳಿದರು.
ಇಸಿಒ ಶಿವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ಮಹಾರುದ್ರಪ್ಪ, ಎನ್ಪಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಘಣ್ಣನವರ್ ಮಾತನಾಡಿದರು. ಶೈಲಾ ರಾಣಿ, ಉಡೇದ ವಾರ್ಷಿಕ ವರದಿ ವಾಚಿಸಿದರು.
ಮುಖ್ಯೋಪಾಧ್ಯಾಯ ಎಚ್.ಆರ್. ಶಾಂತರಾಜ್ ಸ್ವಾಗತಿಸಿದರು. ಜಾನಪದ ನೃತ್ಯ, ಕೋಲಾಟ, ಕಿರುನಾಟಕ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಎಸ್ಡಿಎಂಸಿ ಅಧ್ಯಕ್ಷ ಬಿ. ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಿಆರ್ಪಿ ಮಲ್ಲೇಶಪ್ಪ, ಪತ್ರಕರ್ತ ಜಿಗಳಿ ಪ್ರಕಾಶ್, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಎಸ್ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.