ದಾವಣಗೆರೆ: ಹಿರಿಯ ನಾಗರಿಕರು ಸಮಾಜಕ್ಕೆ ಸ್ಫೂರ್ತಿ ಮತ್ತು ಮಾರ್ಗದರ್ಶಕರು. ಅವರ ಅನುಭವ ಹಾಗೂ ಮಾರ್ಗದರ್ಶನವನ್ನು ಯುವಪೀಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದುಕಾನೂನು ಸೇವಾ ಪ್ರಾಧಿಕಾರದ ಸದಸ್ಯ, ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2021ರ ಪ್ರಯುಕ್ತ ಹಿರಿಯ ನಾಗರಿಕರಿಗಾಗಿ ಏರ್ಪಡಿಸಲಾಗಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾನೂನು ಸೇವಾ ಪ್ರಾಧಿಕಾರವು ಉಚಿತ ಕಾನೂನು ಅರಿವು- ನೆರವು ನೀಡುತ್ತಿದ್ದು, ಹಿರಿಯ ನಾಗರಿಕರ ಯಾವುದೇ ರೀತಿಯ ಕಾನೂನಾತ್ಮಕ ಸಮಸ್ಯೆಗಳ ಪರಿಹಾರಕ್ಕೆ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.
ಹಿರಿಯ ನ್ಯಾಯವಾದಿ ಎಲ್.ಎಚ್. ಅರುಣ್ಕುಮಾರ್, ‘ಹಿರಿಯ ನಾಗರಿಕರು ಎಂಬುದು ಪ್ರತ್ಯೇಕ ಸಮುದಾಯವಲ್ಲ, ಎಲ್ಲ ಕ್ಷೇತ್ರದಲ್ಲೂ ಸಕ್ರಿಯವಾಗಿ ದುಡಿದು, ವಯಸ್ಸಾದ ನಂತರ ಹಿರಿಯ ನಾಗರಿಕ ಎಂಬ ಪದ ಬಳಕೆಗೆ ಬಂದಿದೆ. ಅಭಿವೃದ್ಧಿ ರಾಷ್ಟ್ರಗಳಾದ ಜಪಾನ್, ಜರ್ಮನಿಗಳಲ್ಲಿ ಶೇ 70ರಷ್ಟು ಹಿರಿಯರೇ ಇದ್ದಾರೆ. ಅವರು ಸಕ್ರಿಯವಾಗಿ ದೇಶದ ಅಭಿವೃದ್ಧಿಗೆ
ಶ್ರಮಿಸುತ್ತಿದ್ದಾರೆ. ನಮ್ಮ ದೇಶದಲ್ಲಿಯೂ ಸಹ ಹಿರಿಯರು ಅಭಿವೃದ್ಧಿ ಕಾರ್ಯಗಳಲ್ಲಿ ನೆರವು ನೀಡುವಲ್ಲಿ
ಮುಂದಾಗಬೇಕು’ ಎಂದು ಹೇಳಿದರು.
ಇಂದು ಸಮಾಜದಲ್ಲಿ ಬಂದಿರುವ ಬದಲಾವಣೆಗಳಿಂದಾಗಿ ಹಿರಿಯರ ಬಗ್ಗೆ ಪ್ರೀತಿ ಅನುಕಂಪ, ಸಹಾನುಭೂತಿಯಂತಹ ಮಾನವೀಯ ಮೌಲ್ಯಗಳು ಕಂಡುಬರುತ್ತಿಲ್ಲ. ಹಿರಿಯರ ಮೌಲ್ಯಗಳು, ಸಂಸ್ಕಾರ ಹಾಗೂ ಅವರ ಜೀವನದ ಅನುಭವಗಳು ಎಲ್ಲರಿಗೂ ದಾರಿದೀಪವಾಗಬೇಕು ಎಂದರು.
ಜಿಲ್ಲಾ ಹಿರಿಯ ನಾಗರಿಕರ ಸಂಘದ ಗೌರವ ಕಾರ್ಯದರ್ಶಿ ಗುರುಮೂರ್ತಿ ಎಸ್. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರೀಕರ ಸಬಲೀಕರಣದ ಅಧಿಕಾರಿ ಡಾ. ಕೆ.ಕೆ. ಪ್ರಕಾಶ್, ಸುರಕ್ಷಾ ಮಲ್ಟಿಪರ್ಪಸ್ ಸಂಸ್ಥೆಯ ಅಧ್ಯಕ್ಷ ಷಾ ನವಾಜ್ ಉಪಸ್ಥಿತರಿದ್ದರು.
ಸರ್ಕಾರಿ ಶಾಲೆಯ ಅಂಧ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ವಿವಿಧ ಕ್ರೀಡಾಕೂಟಗಳು ಜರುಗಿದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.