ಪ್ರಭಾ ಮಲ್ಲಿಕಾರ್ಜುನ್
– ಪ್ರಜಾವಾಣಿ ಚಿತ್ರ
ದಾವಣಗೆರೆ: ಲೋಕಸಭಾ ಚುನಾವಣೆಗೆ ಪಕ್ಷ ಸಿದ್ಧಪಡಿಸಿದ ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಜನರ ಮುಂದಿಟ್ಟು ಮತಯಾಚಿಸಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದವರ ಮೇಲೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ನೀಡಿದ ಸೂಚನೆಯ ಕುರಿತು ಅವರು ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.
‘ಈವರೆಗೆ ಯಾವುದೇ ನೋಟಿಸ್ ನನಗೆ ತಲುಪಿಲ್ಲ. ಚುನಾವಣೆಯಲ್ಲಿ ಅವರು (ಗಾಯತ್ರಿ ಸಿದ್ದೇಶ್ವರ) ಸೋಲು ಕಂಡ ಬಳಿಕ ಆರೋಪ ಮಾಡುತ್ತಿದ್ದಾರೆ. ಮತದಾರರಿಗೆ ನಿಜಾಂಶ ಗೊತ್ತಿದೆ’ ಎಂದು ಹೇಳಿದರು.
‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದರೆ ಹೇಗೆ ಕೆಲಸ ಮಾಡಲಿದೆ ಎಂಬುದನ್ನು ಪ್ರಣಾಳಿಕೆಯಲ್ಲಿ ವಿವರಿಸಲಾಗಿತ್ತು. ಇದು ರಾಜ್ಯ ಸರ್ಕಾರದ ಯೋಜನೆಯಲ್ಲ. ಯುವಕರು, ಮಹಿಳೆಯರು ಹಾಗೂ ರೈತರಿಗೆ ಪ್ರಣಾಳಿಕೆಯನ್ನು ಅರ್ಥಪಡಿಸಿ ಮತಯಾಚನೆ ಮಾಡಲಾಗಿದೆ. ಚುನಾವಣೆಯ ಸಂದರ್ಭದಲ್ಲಿ ಆಕ್ಷೇಪಿಸದೇ ಫಲಿತಾಂಶ ಪ್ರಕಟವಾದ ಬಳಿಕ ವಿರೋಧಿಸುತ್ತಿರುವುದು ಏಕೆ’ ಎಂದು ಪ್ರಶ್ನಿಸಿದರು.
‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ಇಡೀ ಪಕ್ಷ ಅವರ ಬೆಂಬಲಕ್ಕಿದೆ, ಸಿದ್ದರಾಮಯ್ಯ ಅವರಿಗೆ ಜಯ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.