ದಾವಣಗೆರೆ: ಸಂಘ–ಸಂಸ್ಥೆಗಳ ಸದಸ್ಯರು ತಮ್ಮ ಡೆವಿಡೆಂಟ್ ಮೊತ್ತವನ್ನು ಅಶಕ್ತ, ಬಡ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಳಸಿ ಪ್ರೋತ್ಸಾಹಿಸಬೇಕು ಎಂದು ಶಾಸಕ ಎಸ್.ಎ. ರವೀಂದ್ರನಾಥ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ದಾವಣಗೆರೆ ಜಿಲ್ಲಾ ಶಾಖೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ದಾವಣಗೆರೆ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಹಣವನ್ನು ಮನೆಯಲ್ಲಿ ಇಡುವ ಬದಲು ಪತ್ತಿನ ಸಂಘಗಳಲ್ಲಿ ಹೂಡಿಕೆ ಮಾಡಿದರೆ ನಿಮಗೆ ಲಾಭವೂ ಬರುತ್ತದೆ. ಸಂಘವು ಬಲಗೊಳ್ಳುತ್ತದೆ. ಹೆಚ್ಚಿನ ಅಂಕ ಪಡೆದಿರುವ ಎಷ್ಟೋ ಮಕ್ಕಳು ಉನ್ನತ ವ್ಯಾಸಂಗ ಮಾಡಲು ಹಣವಿಲ್ಲದೇ ಕೈಚೆಲ್ಲಿ ಕುಳಿತಿರುತ್ತಾರೆ. ಅಂತಹ ಮಕ್ಕಳಿಗೆ ಸಂಘಗಳು ನೆರವಾಗಬೇಕು’ ಎಂದು ಹೇಳಿದರು.
ಪ್ರತಿಭಾ ಪುರಸ್ಕಾರದಿಂದ ಮಕ್ಕಳಿಗೆ ಓದಲು ಸ್ಫೂರ್ತಿ ಬರುತ್ತದೆ. ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ಉನ್ನತ ವ್ಯಾಸಂಗ ಮಾಡಿ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ಪ್ರತಿಭಾ ಪುರಸ್ಕಾರ ಗೌರವ ಎಂದು ತಿಳಿದುಕೊಳ್ಳಬಾರದು ಪಠ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗಿಸಿಕೊಂಡು ಉನ್ನತ ಸ್ಥಾನಕ್ಕೆ ಏರುವ ಮೂಲಕ ಕೀರ್ತಿ ತರಬೇಕು. ಸಂಘ ಸಂಸ್ಥೆಗಳು ಷೇರು ಸಂಗ್ರಹ ಮಾಡಿ ಸಮಾಜಕ್ಕೆ ಉಪಯುಕ್ತವಾದ ಕೆಲಸಕ್ಕೆ ಬಳಸಬೇಕು’ ಎಂದು ಹೇಳಿದರು.
ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎನ್.ಈ. ನಟರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಲಯನ್ ಬಿ.ನಿರಂಜನ್ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘವನ್ನು ಉದ್ಘಾಟಿಸಿದರು. ಕೆ.ಶಿವಶಂಕರ್ ಅಧ್ಯಕ್ಷತೆ ವಹಿಸಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಸಿ.ಆರ್. ಪರಮೇಶ್ವರಪ್ಪ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಕೆ. ಶಿವಪ್ರಸಾದ್, ಕೆಪಿಟಿಸಿಎಲ್ ಕಾರ್ಯ ನಿರ್ವಾಹಕ ಎಂಜಿನಿಯರ್ ಕೆ.ಸಿ. ಕುಮಾರಸ್ವಾಮಿ, ಸಂಘದ ಗೌರವಾಧ್ಯಕ್ಷ ಎ.ಆರ್. ಉಜ್ಜನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕೆ.ನಾಗರಾಜಪ್ಪ, ಕಾರ್ಯಾಧ್ಯಕ್ಷ ಶ್ರೀಧರ್, ಗೌರವ ಸಲಹೆಗಾರರಾದ ಬಿ.ಕೆ.ರೇಣುಕಾಮೂರ್ತಿ, ಕೆ.ಎಂ.ಫಾಲಾಕ್ಷಪ್ಪ, ಹರಿಹರ ತಾಲ್ಲೂಕು ಅಧ್ಯಕ್ಷ ಮುದ್ದೇರ್ ಹನುಮಂತಪ್ಪ, ಮಹಿಳಾ ಉಪಾಧ್ಯಕ್ಷೆ ಕಲ್ಪನಾ ರವೀಂದ್ರನಾಥ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.