ದಾವಣಗೆರೆ:ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ, ಕಾರ್ಮಿಕ ವಿರೋಧಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಮಹಾನಗರ ಪಾಲಿಕೆ ಎದುರು ಉಪವಾಸ ಸತ್ಯಾಗ್ರಹ ನಡೆಯಿತು.
ರಾಷ್ಟ್ರವ್ಯಾಪಿ ನಡೆಯುತ್ತಿರುವ ಈ ಚಳವಳಿಗೆ ಕಾಂಗ್ರೆಸ್ ಸೇರಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿದವು. ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೂ ಉಪವಾಸ ಸತ್ಯಾಗ್ರಹ ನಡೆಯಿತು.
ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ‘ಈ ದೇಶ ರಾಮರಾಜ್ಯ ಆಗಬೇಕು ಎಂದು ಮಹಾತ್ಮ ಗಾಂಧೀಜಿ ಕನಸು ಕಂಡಿದ್ದರು. ಆದರೆ ಈಗ ರಾವಣರಾಜ್ಯ ಆಗುತ್ತಿದೆ. ಭೂಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕರೈತರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತೊಲಗಬೇಕು’ ಎಂದು ಆಗ್ರಹಿಸಿದರು.
ರೈತ ಮುಖಂಡರಾದ ಹುಚ್ಚವ್ವನಹಳ್ಳಿ ಮಂಜುನಾಥ್, ಬಲ್ಲೂರು ರವಿಕುಮಾರ್,ಎಐಕೆಎಸ್ಸಿ ಜಿಲ್ಲಾ ಸಂಚಾಲಕ ಆವರಗೆರೆ ಎಚ್.ಜಿ. ಉಮೇಶ್,ಮುಖಂಡರಾದ ಹೊನ್ನೂರು ಮುನಿಯಪ್ಪ, ಇ.ಶ್ರೀನಿವಾಸ್, ಗುಮ್ಮನೂರು ಬಸವರಾಜ್, ತಿಪ್ಪೇಸ್ವಾಮಿ, ಹೆಗ್ಗೆರೆ ರಂಗಪ್ಪ, ಆದಿಲ್ಖಾನ್, ಭೀಮಾರೆಡ್ಡಿ, ಪ್ರಸಾದ್, ತಿಪ್ಪೇಶಿ ಇದ್ದರು.
ಕಾಂಗ್ರೆಸ್ ಬೆಂಬಲ
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಪ್ರತಿಭಟನೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ವ್ಯಕ್ತಪಡಿಸಿತು.
ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಕಾರ್ಯಕರ್ತರು ದೇಶದ ಬೆನ್ನೆಲುಬಾಗಿರುವ ರೈತರು ಮತ್ತು ಕಾರ್ಮಿಕರಿಗೆ ಅನ್ಯಾಯವಾಗುವಂತ ತಿದ್ದುಪಡಿಗಳನ್ನು ಮಾಡಲು ಸರ್ಕಾರ ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಡಾ.ವೈ.ರಾಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಲೀಗಲ್ ಸೆಲ್ ಅಧ್ಯಕ್ಷ ಪ್ರಕಾಶ್ ಪಾಟೀಲ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.