ಹನುಮಂತಪ್ಪ ಮೃತ ರೈತ
ದಾವಣಗೆರೆ: ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಗ್ರಾಮೀಣ ಪ್ರದೇಶದ ಜನರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೋಮವಾರ ಇಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತರೊಬ್ಬರು ಎದೆನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಮಲ್ಲಿಗೇನಹಳ್ಳಿಯ ಹನುಮಂತಪ್ಪ (50) ಮೃತರು. ಇವರು ರಾಜ್ಯ ರೈತ ಸಂಘದ ಚನ್ನಗಿರಿ ತಾಲ್ಲೂಕು ಘಟಕದ ಕಾರ್ಯದರ್ಶಿಯಾಗಿದ್ದರು.
ಬ್ಯಾಂಕೇತರ ಹಣಕಾಸು ಕಂಪನಿಗಳು ‘ಸರ್ಫೇಸಿ’ (ಆರ್ಥಿಕ ಸ್ವತ್ತುಗಳ ಭದ್ರತೆ, ಪುನಾರಚನೆ ಹಾಗೂ ಭದ್ರತೆ) ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡು ರೈತರಿಗೆ ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಹನುಮಂತಪ್ಪ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.
‘ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ಹೆಚ್ಚುವರಿ ಚಿಕಿತ್ಸೆಗೆ ಬಾಪೂಜಿ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದರು. ಹನುಮಂತಪ್ಪ ಅವರು ಸ್ನೇಹಿತರೊಂದಿಗೆ ಕಾಲ್ನಡಿಗೆಯಲ್ಲಿ ಆಸ್ಪತ್ರೆಗೆ ಸಾಗುತ್ತಿದ್ದಾಗ ಹೃದಯಾಘತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.