ದಾವಣಗೆರೆ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಹೋರಾಟ ನಡೆಸಲು ಮಾದಿಗ ದಂಡೋರ ಸಮಿತಿ ನಿರ್ಧರಿಸಿದೆ.
ಮಾದಿಗ ದಂಡೋರ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಸಿ. ಗುಡ್ಡ ಅವರ ಅಧ್ಯಕ್ಷತೆಯಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ದಾವಣಗೆರೆ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳ ಅಧ್ಯಕ್ಷರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯ ಸಮಿತಿ ಉಪಾಧ್ಯಕ್ಷ ಚಿತ್ರದುರ್ಗದ ಎಚ್. ಏಕಾಂತಪ್ಪ ಮಾತನಾಡಿ ‘ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲಾಗುವುದು ಎಂದುಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಚುನಾವಣೆ ಮುಗಿದು ಐದು ತಿಂಗಳು ಕಳೆದರೂ ಈ ಬಗ್ಗೆ ಚಕಾರವೆತ್ತಿಲ್ಲ. ಹಾಗಾಗಿ ನಳಿನ್ ಕುಮಾರ್ ಕಟೀಲ್ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದು ಅನಿವಾರ್ಯ’ ಎಂದು ತಿಳಿಸಿದರು.
ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ, ‘ಜನವರಿ ಅಂತ್ಯದ ಒಳಗೆ ಜಿಲ್ಲೆಯ ಎಲ್ಲ ಹೋಬಳಿ ಸಮಿತಿಗಳನ್ನು ಆಯಾ ತಾಲ್ಲೂಕು ಸಮಿತಿಯ ಅಧ್ಯಕ್ಷರು ರಚಿಸಬೇಕು. ಬಳಿಕ ಸಭೆ ಸೇರಿ ಹೋರಾಟದ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗುವುದು’ ಎಂದು ಹೇಳಿದರು.
ಪಾಲಿಕೆ ಸದಸ್ಯ ಎಲ್.ಡಿ. ಗೋಣೆಪ್ಪ ಉದ್ಘಾಟಿಸಿದರು. ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ, ಬಳ್ಳಾರಿ ಜಿಲ್ಲಾ ಅಧ್ಯಕ್ಷ ವೀರಸ್ವಾಮಿ, ಹಾವೇರಿ ಜಿಲ್ಲಾ ಅಧ್ಯಕ್ಷ ಉರಸಪ್ಪ, ಜಗಳೂರು ತಾಲ್ಲೂಕು ಅಧ್ಯಕ್ಷ ಜಿ.ಎಚ್. ಮಹೇಶ್, ಚನ್ನಗಿರಿ ತಾಲ್ಲೂಕು ಅಧ್ಯಕ್ಷ ಡಿ. ಮೋಹನ್ದಾಸ್, ಹೊನ್ನಾಳಿ ತಾಲ್ಲೂಕು ಅಧ್ಯಕ್ಷ ಜಿ.ಎಚ್. ತಮ್ಮಣ್ಣ, ದಾವಣಗೆರೆ ತಾಲ್ಲೂಕು ಅಧ್ಯಕ್ಷ ಹುಣಿಸೆಕಟ್ಟೆ ಬಸವರಾಜ್, ದಾವಣಗೆರೆ ನಗರ ಅಧ್ಯಕ್ಷ ಎಂ. ಆಂಜನೇಯ, ಹರಿಹರ ತಾಲ್ಲೂಕು ಅಧ್ಯಕ್ಷ ಎ,ಜೆ. ನಾಗೇಂದ್ರಪ್ಪ, ಜಿಲ್ಲಾ ಹಮಾಲರ ಘಟಕದ ಅಧ್ಯಕ್ಷ ಟಿ. ಮರಿಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಬಿ. ರುದ್ರಶ್, ಬಹುದ್ದೂರು ಘಟ್ಟ ಹನುಮಂತಪ್ಪ, ರವಿ ಎಂ. ಕೆಟಿಜೆ ನಗರ, ಚಿದಾನಂದಪ್ಪ, ಉದಯಪ್ರಕಾಶ್ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.