ಸಾಸ್ವೆಹಳ್ಳಿ: ಜಲ ಪ್ರವಾಹಕ್ಕೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ತುಂಗಭದ್ರಾ ನದಿ ನೀರಿನ ಪ್ರವಾಹ ಒಳಗಾಗುವ ಹೋಬಳಿಯ ಹಳೆ ಐನೂರು ಮತ್ತು ದಾಸರ ಬೀದಿ ಜನವಸತಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಅಲ್ಲಿಯ ನಿವಾಸಿಗಳ ಸಮಸ್ಯೆ ಆಲಿಸಿದರು.
ಇಲ್ಲಿನ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ. ನದಿಯ ನೀರಿನ ಮಟ್ಟ ಮತ್ತಷ್ಟು ಹೆಚ್ಚಾದಲ್ಲಿ ಇಲ್ಲಿನ ಆರು ಮನೆಗಳ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು. ಜಾನುವಾರುಗಳನ್ನು ಸಮೀಪದ ಎಪಿಎಂಸಿ ವಾರ್ಡ್ಗಳಿಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.
‘ಇಲಾಖಾ ಸಿಬ್ಬಂದಿ, ಗ್ರಾಮ ಪಂಚಾಯಿತಿ ಆಡಳಿತ ಕಾರ್ಯಯೋನ್ಮುಖವಾಗಿದೆ’ ಎಂದರು.
‘ತುಂಗಾ ಮತ್ತು ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡಲಾಗಿದ್ದು, ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಪಾತ್ರದ ಜನರು ನೀರಿಗೆ ಇಳಿಯುವ ಪ್ರಯತ್ನ ಮಾಡದಿರಿ’ ಎಂದು ಶಾಸಕ ಡಿ.ಜಿ.ಶಾಂತನಗೌಡ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್, ಹೊನ್ನಾಳಿ ತಹಶೀಲ್ದಾರ್ ಪಟ್ಟರಾಜಗೌಡ, ತಾಲ್ಲೂಕು ಪಂಚಾಯಿತಿ ಇಒ ರಾಘವೇಂದ್ರ, ಉಪತಹಶಿಲ್ದಾರ್ ಚಂದ್ರಪ್ಪ, ರಾಜಸ್ವ ನಿರೀಕ್ಷಕ ದಿನೇಶ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಬ್ಬಾರ್ ಅಲಿ ಖಾನ್, ಪಿಡಿಒ ಹನುಮಂತ ನಾಯ್ಕ, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.