ಬಸವಾಪಟ್ಟಣ: ‘ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ಕಿಶೋರಿಯರು ಅಪೌಷ್ಟಿಕತೆ, ರಕ್ತ ಹೀನತೆಯಿಂದ ಬಳಲುತ್ತಿದ್ದು, ಅವರಲ್ಲಿ ಪೌಷ್ಟಿಕತೆ ಹೆಚ್ಚಿಸಿ ಸದೃಢರನ್ನಾಗಿ ಮಾಡಲು ಪೋಷಣ್ ಮಾಸಾಚರಣೆ ಆಯೋಜಿಸಲಾಗುತ್ತಿದೆ’ ಎಂದು ತಾಲ್ಲೂಕು ಸಮಗ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆರ್.ನಿರ್ಮಲಾ ಹೇಳಿದರು.
ಸಮೀಪದ ಚಿರಡೋಣಿಯಲ್ಲಿ ಏರ್ಪಡಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಅಪೌಷ್ಟಿಕತೆಯಿಂದ ಬಳಲುವವರು ವಿವಿಧ ರೋಗಗಳಿಗೆ ಈಡಾಗುತ್ತಿದ್ದಾರೆ. ಮೊದಲು ಅವರಲ್ಲಿರುವ ಅನಾರೋಗ್ಯವನ್ನು ಗುರುತಿಸಿ ಸಕಾಲದಲ್ಲಿ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ನೀಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು’ ಎಂದು ಹೇಳಿದರು.
‘ಗರ್ಭಿಣಿಯರು, ಬಾಣಂತಿಯರು, ಶಿಶುಗಳ ಅಪೌಷ್ಟಿಕತೆಯನ್ನು ತಡೆಗಟ್ಟಲು ಇಲಾಖೆಯಿಂದ ಪ್ರತಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪೂರಕ ಪೌಷ್ಟಿಕ ಆಹಾರವನ್ನು ಅಂಗನವಾಡಿಗಳಲ್ಲಿನ ಮಕ್ಕಳಿಗೆ ಮತ್ತು ಇತರರಿಗೆ ತಲುಪಿಸಲಾಗುತ್ತಿದೆ. ರಕ್ತ ಹೀನತೆಯಿಂದ ಬಳಲುತ್ತಿರುವ ಮಕ್ಕಳ ಪೋಷಕರನ್ನು ಕರೆದು ತಿಳಿವಳಿಕೆ ನೀಡಲಾಗುತ್ತಿದೆ’ ಎಂದು ನಿರ್ಮಲಾ ತಿಳಿಸಿದರು.
ವೈದ್ಯಾಧಿಕಾರಿ ನವ್ಯಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಜ್ಯೋತಿ, ಶೇಖರಪ್ಪಗೌಡ, ಶಿಕ್ಷಕಿ ವೀಣಾ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಬಿ.ಎಸ್.ಶೋಭಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.