ADVERTISEMENT

ಬಡಕಾರ್ಮಿಕರಿಗೆ ₹10 ಸಾವಿರ ವಿಶೇಷ ಪ್ಯಾಕೇಜ್‌ಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಮೇ 2021, 2:14 IST
Last Updated 18 ಮೇ 2021, 2:14 IST

ದಾವಣಗೆರೆ: ಕೋವಿಡ್ ಕಾರಣದಿಂದ ಲಾಕ್‍ಡೌನ್ ಘೋಷಿಸಿರುವುದರಿಂದ ಬಡ ಕಾರ್ಮಿಕರು ಸಂಕಷ್ಟದಲ್ಲಿದ್ದು, ಅವರಿಗೆ ₹10 ಸಾವಿರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕಾಂಗ್ರೆಸ್‌ನ ಕಾರ್ಮಿಕ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸುಭಾನ್‍ಸಾಬ್ ಆಗ್ರಹಿಸಿದ್ದಾರೆ.

‘ಸರ್ಕಾರದ ಕೋವಿಡ್ ನಿಯಮಗಳಿಂದಾಗಿ ಬಡವರು, ಕಟ್ಟಡ ಕಾರ್ಮಿಕರು, ಆಟೊ ಚಾಲಕರು, ಟ್ಯಾಕ್ಸಿ ಚಾಲಕರು, ಗಾರ್ಮೆಂಟ್ಸ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಅಂದಿನ ದುಡಿಮೆಯಿಂದಲೇ ಜೀವನ ನಿರ್ವಹಣೆ ಮಾಡುತ್ತಿದ್ದು, ಇವರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪ್ಯಾಕೇಜ್‍ ಘೋಷಣೆ ಮಾಡದೇ ಕಾಲಹರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ತಕ್ಷಣವೇ ಬಡ ಕಾರ್ಮಿಕರ ಪರವಾಗಿ ಸಂಕಷ್ಟದಲ್ಲಿರುವ ಕಾರ್ಮಿಕರ ಪರವಾಗಿ ಕಾಳಜಿ ವಹಿಸಿ ಕಾರ್ಮಿಕ ಸಚಿವರಿಗೆ ಬುದ್ದಿಮಾತು ಹೇಳಬೇಕು. ಇಲ್ಲದಿದ್ದರೆ ಮುಂದಾಗುವ ಯಾವುದೇ ಪರಿಣಾಮಕ್ಕೂ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ADVERTISEMENT

ಕಟ್ಟಡ ನಿರ್ಮಾಣ ಕಾರ್ಮಿಕರು ಅವರು ವಾಸಿಸುವ ವ್ಯಾಪ್ತಿಯಲ್ಲಿಯೇ ಕೆಲಸ ನಿರ್ವಹಿಸಲುಷರತ್ತುಬದ್ಧ ಅನುಮತಿ ನೀಡಿರುವುದು ಎಷ್ಟು ಸರಿ? ಆಯಾ ಪ್ರದೇಶದ ವ್ಯಾಪ್ತಿಯಲ್ಲಿ ಕಟ್ಟಡ ಕೆಲಸ ಇಲ್ಲದಿದ್ದರೆ ಕಾರ್ಮಿಕರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ ಅವರು, ಇಂತಹ ನಿಯಮಗಳಿಂದ ಬಡ ಕಾರ್ಮಿಕರಿಗೆ ತೊಂದರೆಯಾಗುತ್ತದೆಯೇ ಹೊರತು ಅವರಿಗೆ ಕೂಲಿ ಕೆಲಸ ಸಿಗುವುದು ದುಸ್ತರವಾಗಿದೆ. ಆದ್ದರಿಂದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಲಿಯಲ್ಲಿರುವ ₹9 ಸಾವಿರ ಕೋಟಿಯನ್ನು ಬಳಸಿಕೊಂಡು ಕಟ್ಟಡ ಕಾರ್ಮಿಕರಿಗೆ ತಲಾ ₹10 ಸಾವಿರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

‘ಲಾಕ್‍ಡೌನ್ ಘೋಷಣೆಯಾದ ನಂತರ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕರ ಪರವಾಗಿ ಯಾವುದೇ ಪ್ಯಾಕೇಜ್‍ಗಳನ್ನು ಘೋಷಣೆ ಮಾಡದೇ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಕಾರ್ಮಿಕ ಕುಟುಂಬಗಳಿಗೆ ಸಾಂತ್ವನ ಸಹ ಹೇಳದೇ ಮೌನವಾಗಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.

ಬಡ ಕಾರ್ಮಿಕರಿಗೆ ತಕ್ಷಣ ಪ್ಯಾಕೇಜ್ ಘೋಷಣೆ ಮಾಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಮಿಕ ಇಲಾಖೆಗಳ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.