ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ವಿತರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳು ಸೋಮವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಸೌಮ್ಯ ಮಾತನಾಡಿ, ‘ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುತ್ತಿರುವುದು ಸಂತೋಷದ ವಿಚಾರ. ಆದರೆ, 2 ತಿಂಗಳಿನಲ್ಲಿ ಪದವಿ ಮುಗಿಸಿ ಉನ್ನತ ವ್ಯಾಸಂಗಕ್ಕೆ ಹೋಗುವ ಅಂತಿಮ ವರ್ಷದ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ಈ ಯೋಜನೆ ತಲುಪಬೇಕು. ಸರ್ಕಾರದ ಈ ಧೋರಣೆ ಸರಿಯಲ್ಲ’ ಎಂದು ದೂರಿದರು.
ಎಐಡಿಎಸ್ಒಜಿಲ್ಲಾ ಉಪಾಧ್ಯಕ್ಷರಾದ ನಾಗಜ್ಯೋತಿ ಮಾತನಾಡಿ, ‘ಸರ್ಕಾರಿ ಕಾಲೇಜುಗಳಲ್ಲಿ ಲ್ಯಾಪ್ಟಾಪ್ ತಾರತಮ್ಯದ ಜೊತೆ ಉಪನ್ಯಾಸಕರ ಕೊರತೆ ಇರುವುದು ದೊಡ್ಡ ಸಮಸ್ಯೆಯಾಗಿದೆ. ಅತಿಥಿ ಉಪನ್ಯಾಸಕರ ಮೂಲಕ ತರಗತಿ ನಡೆಸಲಾಗುತ್ತಿದೆ. ಅವರಿಗೆ ವೇತನವೂ ಸಮರ್ಪಕವಾಗಿ ಸಿಗುತ್ತಿಲ್ಲ. ಕಾಯಂ ಉಪನ್ಯಾಸಕರನ್ನು ನೇಮಿಸಿಕೊಳ್ಳುವ ಮೂಲಕ ತರಗತಿಗಳು ಸುಗಮವಾಗಿ ನಡೆಯುವಂತೆ ಸರ್ಕಾರ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಮಾತನಾಡಿ, ‘ವಿದ್ಯಾರ್ಥಿಗಳ ಮನವಿ ಪತ್ರ ಸ್ವೀಕರಿಸಿ, ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಶಿಫಾರಸ್ಸು ಮಾಡಿ ಬೇಡಿಕೆ ಈಡೇರಿಸುತ್ತೇವೆ’ ಎಂದು ಭರವಸೆ ನೀಡಿದರು.
ಸಂಘಟನೆಯ ಮುಖಂಡರಾದ ರಮೇಶ್, ಆಂಜನೇಯ, ಬಿ. ಗಣೇಕಲ್, ಭದ್ರಿನಾಥ, ಸುದರ್ಶನ್, ಕಾವ್ಯ, ಸ್ವಪ್ನ, ನೇತ್ರ ಮೇಘನಾ, ವೀರೇಶ್, ಕುಕ್ಕುವಾಡ ಮಂಜುನಾಥ್, ಆಸಿಯಾ, ಚೈತ್ರ, ಸತೀಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.