ADVERTISEMENT

ಜಿಲ್ಲಾಡಳಿತದೊಂದಿಗೆ ಎನ್‌ಜಿಒ ಕೈಜೋಡಿಸಲಿ: ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 7 ಮೇ 2021, 4:13 IST
Last Updated 7 ಮೇ 2021, 4:13 IST
ಜಿ.ಎಂ. ಸಿದ್ದೇಶ್ವರ
ಜಿ.ಎಂ. ಸಿದ್ದೇಶ್ವರ   

ದಾವಣಗೆರೆ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸಲು ಮತ್ತು ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಕಾರ್ಯದಲ್ಲಿ ಜಿಲ್ಲಾ ಆಡಳಿತದೊಂದಿಗೆ ಜಿಲ್ಲೆಯ ಸರ್ಕಾರೇತರ ಸಂಘ ಸಂಸ್ಥೆಗಳು ಕೈಜೋಡಿಸಿ ನೆರವಾಗಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಅವರು ಮಾತನಾಡಿದರು.

ಎಲ್ಲ ಕೆಲಸಗಳನ್ನು ಕೇವಲ ಸರ್ಕಾರ ಮಾಡಲಾಗುವುದಿಲ್ಲ. ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ಕೈಜೋಡಿಸಿದರೆ ಕೊರೊನಾ ನಿಯಂತ್ರಿಸಬಹುದು. ಸಿ.ಜಿ. ಆಸ್ಪತ್ರೆಗೆ ದಾಖಲಾಗುವವರಿಗೆ ಉಟೋಪಾಚಾರದ ವ್ಯವಸ್ಥೆಯನ್ನು ಒಂದು ಸಂಸ್ಥೆ ವಹಿಸಿಕೊಂಡಿದೆ. ಇದೇ ರೀತಿ ಎಲ್ಲ ಸಂಘ ಸಂಸ್ಥೆಗಳು ಮುಂದೆ ಬರಬೇಕು ಎಂದು ಮನವಿ ಮಾಡಿದರು.

ADVERTISEMENT

ಎಲ್ಲ ಸೋಂಕಿತರು ಜಿಲ್ಲಾ ಆಸ್ಪತ್ರೆಯನ್ನು ಅವಲಂಬಿಸಿದಾಗ ಒತ್ತಡ ಉಂಟಾಗುತ್ತದೆ. ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿಯೇ ಸೋಂಕಿತರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯ ಇದ್ದರಷ್ಟೇ ಜಿಲ್ಲಾ ಆಸ್ಪತ್ರೆಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಆಮ್ಲಜನಕ ಸರಬರಾಜು, ಸೋಂಕಿತರಿಗೆ ಚಿಕಿತ್ಸೆ ವಿಚಾರದಲ್ಲಿ ರಾಜೀ ಪ್ರಶ್ನೆ ಇಲ್ಲ. ಬೇರೆ ಜಿಲ್ಲೆಗಳ ತಪ್ಪುಗಳನ್ನು ನೋಡಿ ನಾವು ಪಾಠ ಕಲಿಯಬೇಕು. ನಮಗೆ ತಪ್ಪು ಮಾಡಿ ಪಾಠ ಕಲಿಯಲು ಸಮಯವಿಲ್ಲ. ಜಾಗರೂಕತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಕೋವಿಡ್ ಚಿಕಿತ್ಸೆಗೆ ಮೀಸಲಾಗಿರುವ ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರರಾಗಿರುವ ಸಿಬ್ಬಂದಿ ಸೋಂಕಿತರಿಗೆ ಸರಿಯಾದ ಮಾಹಿತಿ ನೀಡಬೇಕು. ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಕೋವಿಡ್ ಬೆಡ್‍ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಎಂದರು.

ಆಕ್ಸಿಜನ್ ಬೆಡ್‍ಗಳ ಹಂಚಿಕೆ ವಿಷಯದಲ್ಲಿ ಯಾವುದೇ ಶಿಫಾರಸಿಗೂ ಮಣಿಯಬೇಡಿ. ಜೀವ ಎಲ್ಲರದೂ ಒಂದೇ. ಈ ನಿಟ್ಟಿನಲ್ಲಿ ಮೊದಲು ಬಂದವರಿಗೆ ಆದ್ಯತೆ ನೀಡಿ ಬೆಡ್ ಹಂಚಿಕೆ ಮಾಡಿ ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್‌ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.