ADVERTISEMENT

ಸರ್ಕಾರಿ ಶಾಲಾ ಶಿಕ್ಷಕರೇ ಹೆಚ್ಚು ಪ್ರತಿಭಾವಂತರು: ಶಾಸಕ

‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಮೇ 2025, 15:37 IST
Last Updated 15 ಮೇ 2025, 15:37 IST
ಹರಿಹರದ ಡಿಆರ್‌ಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಿದರು
ಹರಿಹರದ ಡಿಆರ್‌ಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಿದರು   

ಹರಿಹರ: ಸರ್ಕಾರಿ ಶಾಲಾ ಶಿಕ್ಷಕರು ಹೆಚ್ಚು ಪ್ರತಿಭಾವಂತರಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಬಿ.ಪಿ.ಹರೀಶ್ ಮನವಿ ಮಾಡಿದರು.

ನಗರದ ಡಿಆರ್‌ಎಂ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಗುರುವಾರ ಆಯೋಜಿಸಿದ್ದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಹಾಲು, ಕಡಿಮೆ ಶುಲ್ಕ, ಪುಸ್ತಕ, ಬ್ಯಾಗ್, ಶೂ, ಇತರೆ ಪರಿಕರ ವಿತರಣೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಉತ್ತಮ ಬೋಧಕ ಸಿಬ್ಬಂದಿ ಹೊಂದಿರುವ ಸರ್ಕಾರಿ ಶಾಲೆಗಳತ್ತ ಸಮುದಾಯ ಗಮನ ಹರಿಸಬೇಕು. ಈಚಿನ ವರ್ಷಗಳಲ್ಲಿ ಗ್ರಾಮೀಣ ಹಾಗೂ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ಸಾಧನೆ ಮಾಡುತ್ತಿರುವುದು ಶ್ಲಾಘನೀಯ’ ಎಂದರು.

ADVERTISEMENT

‘ಅಜೀಂ ಪ್ರೇಮ್‌ಜಿ ಫೌಂಡೇಷನ್‌ ಸರ್ಕಾರಿ ಶಾಲೆಗಳ ಜತೆ ಕೈಜೋಡಿಸಿದೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಅಪೌಷ್ಠಕತೆ ನಿವಾರಣೆಗೆ ನೆರವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ಹೆಚ್ಚಿಸಲು ರಾಜ್ಯದ 48 ಶಾಲೆಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಅಕ್ಷರ ದಾಸೋಹ ರಾಜ್ಯ ಜಂಟಿ ನಿರ್ದೇಶಕ ಹಸನ್ ಮೊಯಿನುದ್ದೀನ್ ಹೇಳಿದರು.

ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳು ಬದ್ಧವಾಗಿವೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಕೊಟ್ರೇಶಪ್ಪ ಹೇಳಿದರು.

ಶಾಲೆಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ 2 ಎಕರೆ 30 ಗುಂಟೆ ಜಮೀನನ್ನು ಗುರುತಿಸಿ ಶಾಲೆಗೆ ಹಸ್ತಾಂತರಿಸುವ ಮಹತ್ವದ ಕೆಲಸವು ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಕಂದಾಯ, ಭೂಮಾಪನಾ ಇಲಾಖೆಗಳ ಸಹಕಾರದಲ್ಲಿ ಸಾಕಾರಗೊಂಡಿದೆ ಎಂದು ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಹೇಳಿದರು.

ಶಾಲೆಯ ಉಪಪ್ರಾಚಾರ್ಯ ಸಿದ್ಧರಾಮೇಶ್ವರ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಮಂಜುನಾಥ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ದುರುಗಪ್ಪ, ಡಿಆರ್‌ಎಂ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾಜಶೇಖರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಜಬಿಉಲ್ಲಾ, ಸಿಆರ್‌ಪಿ ಶ್ರೀಲಲಿತಾ ಹಾಗೂ ಶಿಕ್ಷಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.