
ದಾವಣಗೆರೆ: ಮೆಕ್ಕೆಜೋಳ ಹಾಗೂ ಭತ್ತಕ್ಕೆ ಖರೀದಿ ಕೇಂದ್ರ ತೆರೆದು ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋರಾಟ ಆರಂಭಿಸಲಾಯಿತು. ಇಲ್ಲಿಂದ ಎತ್ತಿನ ಬಂಡಿಯೊಂದಿಗೆ ಹೊರಟ ಮೆರವಣಿಗೆ ಉಪವಿಭಾಗಾಧಿಕಾರಿ ಕಚೇರಿ ತಲುಪಿತು. ಮೆಕ್ಕೆಜೋಳವನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಲಾಯಿತು.
‘ಅತಿವೃಷ್ಟಿಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಷ್ಟವಾಗಿದೆ. ರೈತರ ಸಂಕಷ್ಟ ಆಲಿಸಲು ಕೃಷಿ ಮತ್ತು ಕಂದಾಯ ಸಚಿವರು ಹಳ್ಳಿಗಳಿಗೆ ಭೇಟಿ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಜನರಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ಘೋಷಣೆ ಮಾಡಿದ ಪರಿಹಾರ 50 ದಿನ ಕಳೆದರೂ ರೈತರನ್ನು ತಲುಪಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
‘ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಕುರ್ಚಿ ಮೇಲೆ ಇರುವಷ್ಟು ಕಾಳಜಿ ರೈತರ ಮೇಲಿಲ್ಲ. ಕುರ್ಚಿಯ ಮೇಲೆ ಕೂರಿಸಿದ ಜನರಿಗೆ ಕುರ್ಚಿಯಿಂದ ಕೆಳಗೆ ಇಳಿಸುವುದೂ ಗೊತ್ತಿದೆ. ಶಾಸಕರ ಖರೀದಿ ನಿಲ್ಲಿಸಿ ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರ ತೆರೆಯಬೇಕು. ಇಲ್ಲದಿದ್ದರೆ ರೈತರ ಕೈಯಲ್ಲಿರುವ ಬಾರುಕೋಲು ವಿಧಾನಸೌಧಕ್ಕೆ ಬರಲಿದೆ’ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಎಚ್ಚರಿಕೆ ನೀಡಿದರು.
ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಬಸವರಾಜ ನಾಯ್ಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ, ಮುಖಂಡರಾದ ಲೋಕಿಕೆರೆ ನಾಗರಾಜ್, ಸತೀಶ್ ಬಿ.ಎಂ. ಕೋಳೆನಹಳ್ಳಿ, ಧನಂಜಯ್ ಕಡ್ಲೆಬಾಳ್, ಬಿ.ಜೆ. ಅಜಯ್ ಕುಮಾರ್, ಮಾಡಾಳು ಮಲ್ಲಿಕಾರ್ಜುನ, ಚಂದ್ರಶೇಖರ ಪೂಜಾರ್ ಹಾಜರಿದ್ದರು.
‘ಕಾಂಗ್ರೆಸ್ ಗೂಂಡಾಗಿರಿ ನಡೆಯಲ್ಲ’
ಹೊನ್ನಾಳಿಯ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಮುಖಂಡರು ದಾದಾಗಿರಿ ಮಾಡಿದ್ದಾರೆ. ಇಂತಹ ಗೂಂಡಾಗಿರಿ ಇನ್ನು ಮುಂದೆ ನಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ‘ಅಧಿಕಾರದ ದರ್ಪ ಕಾಂಗ್ರೆಸ್ ಮುಖಂಡರಲ್ಲಿ ಹೆಚ್ಚಾಗಿದೆ. ಇಂತಹ ದರ್ಪವನ್ನು ಮುಂದುವರಿಸಿದರೆ ತಕ್ಕ ಪ್ರಕ್ರಿಯೆ ನೀಡಬೇಕಾಗುತ್ತದೆ. ಮುಖ್ಯಮಂತ್ರಿ ಬಂದರೂ ರಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು. ‘ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಹಚ್ಚಿದ ಕಿಚ್ಚು ರಾಜ್ಯಕ್ಕೆ ವಿಸ್ತರಿಸಿದೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕರು ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ಇದರ ವಿರುದ್ಧ ಹೋರಾಟ ಮುಂದುವರಿಸಲಾಗುವುದು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.