
ಹರಿಹರ: ಪುರಾಣ ಪ್ರಸಿದ್ಧ ಕ್ಷೇತ್ರನಾಥ ಹರಿಹರೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ನಗರದಲ್ಲಿ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧೆ, ಭಕ್ತಿ, ಸಡಗರದಿಂದ ಜರುಗಿತು.
ಬೆಳಿಗ್ಗೆ 10.55ಕ್ಕೆ ಮೇಷ ಲಗ್ನದ ಶುಭ ಮಹೂರ್ತದಲ್ಲಿ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನ ರಸ್ತೆಯ ತೇರುಗಡ್ಡೆ ವೃತ್ತದಿಂದ ಶಿವಮೊಗ್ಗ ವೃತ್ತದವರೆಗೆ ಭಕ್ತ ಜನರು ‘ಹರ ಹರ ಮಹಾದೇವ್’, ‘ಗೋವಿಂದಾ ಗೋವಿಂದಾ’ ಎಂದು ನಾಮಸ್ಮರಣೆ ಮಾಡುತ್ತಾ ರಥ ಎಳೆದರು.
ಕೆಲವರು ತೇರಿನ ಮುಕುಟಕ್ಕೆ ಬಾಳೆಹಣ್ಣು, ಹೂವು, ಉತ್ತತ್ತಿ ಎಸೆದರು. ತೇರಿನ ಗಾಲಿಗಳಿಗೆ ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ರಥವು ಶಿವಮೊಗ್ಗ ವೃತ್ತಕ್ಕೆ ಆಗಮಿಸುತ್ತಿದ್ದಂತೆ ನಗರದ ಶಿವಮೊಗ್ಗ, ಹರಪನಹಳ್ಳಿ ಹಾಗೂ ದಾವಣಗೆರೆ ಮಾರ್ಗ ಬಂದ್ ಆಗಿದ್ದರಿಂದ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು.
ರಥೋತ್ಸವಕ್ಕೂ ಮುನ್ನ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ನಡೆಸಿ ನಂತರ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವದಲ್ಲಿ ಸರ್ವಧರ್ಮಿಯರೂ ಪಾಲೊಂಡಿದ್ದು ವಿಶೇಷ.
ದಾಸರ ತಂಡ: ರಥೋತ್ಸವದಲ್ಲಿ ನಗರ ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ದಾಸ ಪರಂಪರೆ ಅನುಯಾಯಿಗಳು ಶ್ವೇತ ವಸ್ತ್ರಧಾರಿಗಳಾಗಿ ಕೀರ್ತನೆಗಳನ್ನು ಹಾಡಿದ್ದು ಜನಮನ ಸೆಳೆಯಿತು.
ವಿವಿಧ ಸಂಘ, ಸಂಸ್ಥೆಗಳಿಂದ ಭಕ್ತರಿಗೆ ಮಜ್ಜಿಗೆ, ಶರಬತ್, ಪಾನಕ, ಅನ್ನ ದಾಸೋಹ ನಡೆಯಿತು. ಶಾಸಕ ಬಿ.ಪಿ.ಹರೀಶ್, ಬಿಜೆಪಿ ಮುಖಂಡರಾದ ಎಸ್.ಎಂ.ವೀರೇಶ್ ಹನಗವಾಡಿ, ಚಂದ್ರಶೇಖರ್ ಪೂಜಾರ್, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ನಗರಸಭೆ ಸದಸ್ಯರು, ದೇವಸ್ಥಾನ ಸಮಿತಿ ಸದಸ್ಯರು, ತಹಶೀಲ್ದಾರ್ ಸಂತೋಷ್ ಕುಮಾರ್ ಜಿ., ಕಂದಾಯ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಎಚ್.ಜಿ.ಹೇಮಂತ್ ಕುಮಾರ್ ಉಪಸ್ಥಿತರಿದ್ದರು.
3 ದಿನದ ಜಾತ್ರೆ: ರಥೋತ್ಸವ ನಿಮಿತ್ತ ದೇವಸ್ಥಾನ ರಸ್ತೆಯಲ್ಲಿ ಖಾರಾ ಮಂಡಕ್ಕಿ, ಬೆಂಡು–ಬತ್ತಾಸ್, ಮಕ್ಕಳ ಆಟಿಕೆ, ಬಳೆ, ಬಟ್ಟೆ ಸೇರಿದಂತೆ ಮಹಿಳೆಯರ ಆಲಂಕಾರಿಕ ವಸ್ತುಗಳ ನೂರಾರು ಅಂಗಡಿಗಳು ತಲೆಎತ್ತಿದ್ದು, 3 ದಿನ ಜಾತ್ರಾ ಸಡಗರ ಇರಲಿದೆ. ಬೆಂಗಳೂರು, ಹಾಸನ, ಅರಸೀಕೆರೆ, ಕಡೂರು, ಬೀರೂರು ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.