
ಹರಿಹರ: ರಸ್ತೆ ನಿರ್ಮಾಣ ಮಾಡಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಶನಿವಾರ ನಗರದ ಜೆ.ಸಿ. ಬಡಾವಣೆಯ ಹಳ್ಳದ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
‘ಶೋಭಾ ಟಾಕೀಸ್ ಸರ್ಕಲ್ನಿಂದ ಜೆ.ಸಿ. ಬಡಾವಣೆಗೆ ಜೋಡಿಸುವ ಪ್ರಮುಖ ಮಾರ್ಗವಾದ ಈ ರಸ್ತೆಯ ಅಭಿವೃದ್ಧಿಯ ಬಗ್ಗೆ ನಗರಸಭೆ ನಿರ್ಲಕ್ಷ್ಯ ವಹಿಸಿದೆ’ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
‘ಗುಂಡಿಗಳನ್ನು ತಪ್ಪಿಸುವ ಭರದಲ್ಲಿ ಹಲವು ಬೈಕ್ ಸವಾರರು ಹಳ್ಳಕ್ಕೆ ಉರುಳಿ ಬಿದ್ದ ಪ್ರಕರಣಗಳು ನಡೆದಿವೆ. ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ನಿತ್ಯ ಸಾವಿರಾರು ಜನ ಸಂಚರಿಸುತ್ತಾರೆ. ಸಿ.ಸಿ. ರಸ್ತೆ ನಿರ್ಮಿಸಲು ಟೆಂಡರ್ ಕರೆದು ಹಲವು ತಿಂಗಳಾದರೂ ಈವರೆಗೆ ಏಕೆ ಕಾಮಗಾರಿ ಆರಂಭಿಸಿಲ್ಲ’ ಎಂದು ಪ್ರಶ್ನಿಸಿದರು.
₹ 5 ಲಕ್ಷಕ್ಕೆ ಟೆಂಡರ್ ಪ್ರಕ್ರಿಯೆ ಆಗಿದೆ. ಸಿ.ಸಿ. ರಸ್ತೆ ನಿರ್ಮಿಸಲಾಗುವುದು. ಸೋಮವಾರದಂದು ಗುದ್ದಲಿ ಪೂಜೆ ನೆರೆವೇರಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ನಗರಸಭೆ ಜೆಇ ಕಾವೇರಿ ಭರವಸೆ ನೀಡಿದರು.
ಕರವೇ ತಾಲ್ಲೂಕು ಘಟಕ ಅಧ್ಯಕ್ಷ ವೈ.ರಮೇಶ್ ಮಾನೆ, ನಗರ ಘಟಕ ಅಧ್ಯಕ್ಷ ಪ್ರೀತಮ್ ಬಾಬು, ಉಪಾಧ್ಯಕ್ಷ ಶಂಕರ್ ದುರ್ಗೋಜಿ, ಪದಾಧಿಕಾರಿಗಳಾದ ರೇವಣಸಿದ್ದಪ್ಪ, ಸಿದ್ದಪ್ಪ, ಹಾಲಸ್ವಾಮಿ, ಅಲ್ಲಾಬಕ್ಷಿ, ಶಿವು, ರಾಮು, ಚಂದ್ರು ಹಾಗೂ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.