
ಹರಿಹರ: ರಾಹುಲ್ ಗಾಂಧಿ ಅವರು ಗುಜರಾತ್ನಲ್ಲಿ ಪಕ್ಷದ ಬಲವರ್ಧನೆಗೆ ಅನುಸರಿಸುತ್ತಿರುವ ಮಾದರಿಯನ್ನು ರಾಜ್ಯದಲ್ಲೂ ಜಾರಿ ಮಾಡಬೇಕಿದೆ ಎಂದು ಕಾಂಗ್ರೆಸ್ ಪಕ್ಷದ ಹರಿಹರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್ಕುಮಾರ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಅವರ ಜನಸಂಪರ್ಕ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಹರಿಹರ ಮತ್ತು ಮಲೇಬೆನ್ನೂರು ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಜಾತಂತ್ರ ಹಾಗೂ ಜಾತ್ಯತೀತ ಮನೋಭಾವವನ್ನು ಮತ್ತೆ ಬಿತ್ತಿ ಕಾಂಗ್ರೆಸ್ನತ್ತ ಜನರ ಚಿತ್ತ ಹರಿಸಲು ರಾಹುಲ್ ಕಾರ್ಯತಂತ್ರ ರೂಪಿಸಿದ್ದಾರೆ ಎಂದರು.
‘ಪಕ್ಷದ ಸಿದ್ಧಾಂತ, ತತ್ವಗಳನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕಿದೆ. ಕೋಮುವಾದಿತನ ಹರಡಿ ಜನ ಸಾಮಾನ್ಯರ ನಡುವೆ ದ್ವೇಷ, ಅಸೂಯೆ ಬೆಳೆಸುತ್ತಿರುವ ಬಿಜೆಪಿಯ ಬಣ್ಣ ಬಯಲು ಮಾಡಬೇಕಿದೆ’ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ರಾಜ್ಯ ಸರ್ಕಾರದಿಂದ ತಾಲ್ಲೂಕಿನ ಅಭಿವೃದ್ಧಿಗೆ ಅಗತ್ಯ ಅನುದಾನ ತರಲು ಸಂಬಂಧಿತ ಸಚಿವರಿಗೆ ಮನವಿ ನೀಡಿದ್ದೇನೆ. ಅನುದಾನ ಬರುವ ಭರವಸೆ ಇದ್ದು, ತಾಲ್ಲೂಕಿನಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಅವರು ಹೇಳಿದರು.
ಹರಿಹರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ.ಹನುಮಂತಪ್ಪ, ಮಲೇಬೆನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಆಬಿದ್ ಅಲಿ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.