
ಹರಿಹರ: ನಗರದ ಹೊರ ಹೊಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಮಕರ ಸಂಕ್ರಾಂತಿ ಹಬ್ಬದಂದು (ಜ. 15ರಂದು) ವಚನಾನಂದ ಶ್ರೀ ಸಾನ್ನಿಧ್ಯದಲ್ಲಿ ಹರಜಾತ್ರಾ ಮಹೋತ್ಸವ ನಡೆಯಲಿದೆ.
ಗುರುಪೀಠದಲ್ಲಿ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಹಾಗೂ ಟ್ರಸ್ಟ್ ವತಿಯಿಂದ ಭಾನುವಾರ ನಡೆದ ಹರಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಸಮಾಜದ ಮುಖಂಡರು, ಧರ್ಮದರ್ಶಿಗಳು, ಭಕ್ತರು ಜ. 15ರಂದು ಹರಜಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎಂದು ಪೀಠದ ಆಡಳಿತಾಧಿಕಾರಿ ಎಚ್.ಪಿ.ರಾಜ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
15ರಂದು ಮಕರ ಸಂಕ್ರಾಂತಿಯಂದು ಕಿತ್ತೂರ ರಾಣಿ ಚನ್ನಮ್ಮಾಜಿಯ ದ್ವಿಶತಮಾನ ವಿಜಯೋತ್ಸವದ ಸಮಾರೋಪ ಸಮಾರಂಭ ಹಾಗೂ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳ ಅಷ್ಟಮ ವಾರ್ಷಿಕ ಪೀಠಾರೋಹಣ ನಡೆಯಲಿದೆ.
ಹಾವೇರಿಯ ವೈದ್ಯ ಬಸವರಾಜ ವೀರಾಪುರ ಅವರನ್ನು ಹರಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ದಕ್ಷಿಣದಿಂದ ಉತ್ತರಾಯಣ ಪುಣ್ಯ ಕಾಲಕ್ಕೆ ಸೂರ್ಯ ಪಥ ಬದಲಿಸುವ ಮಕರ ಸಂಕ್ರಾಂತಿ ಹಬ್ಬದ ದಿನ ನಡೆಯುವ ಹರಜಾತ್ರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.