ADVERTISEMENT

ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲಾ ವಯೋಮಾನದವರಿಗೂ ಕೋವಿಡ್ ಲಸಿಕೆ: ಸುಧಾಕರ್

​ಪ್ರಜಾವಾಣಿ ವಾರ್ತೆ
Published 21 ಮೇ 2021, 15:55 IST
Last Updated 21 ಮೇ 2021, 15:55 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ದಾವಣಗೆರೆ: ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ ಎಲ್ಲಾ ವಯೋಮಾನದವರಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ರಾಜ್ಯದಲ್ಲಿ ಎಲ್ಲಿಯೂ ಆಕ್ಸಿಜನ್‌ ಕೊರತೆ ಇಲ್ಲ. ರೆಮ್‌ಡಿಸಿವಿರ್ ಪ್ರತಿ ಜಿಲ್ಲೆಯಲ್ಲೂ ಹೆಚ್ಚಿನ ಪ್ರಮಾಣದಲ್ಲಿವೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನನ್ನೊಂದಿಗೆ ಮಾತನಾಡಿದ್ದು, ಇದುವರೆಗೆ ಅವರು ರೆಮ್‌ಡಿಸಿವಿರ್‌ನ 10 ಲಕ್ಷ ವಯಲ್‌ಗಳನ್ನು ರಾಜ್ಯಕ್ಕೆ ಕಳುಹಿಸಿಕೊಟ್ಟಿದ್ದಾರೆ’ ಎಂದರು.

ಪ್ರಾರಂಭದ ದಿನಗಳಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿದ್ದ ಬೆಂಗಳೂರು ಮಹಾನಗರ ಹಾಗೂ ಜಿಲ್ಲೆಗಳಲ್ಲಿ ಈಗ ಸೋಂಕು ಇಳಿಮುಖವಾಗಿದೆ. ಶೇ 47ರಷ್ಟಿದ್ದ ಅದರ ಪ್ರಮಾಣ ಶೇ 23ರಿಂದ 24ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.

ADVERTISEMENT

ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆಯೇ, ಜನರು ಜಾಗೃತರಾಗಿ ನಿಯಮಗಳ ಪಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ಇನ್ನೂ ಕೆಲವು ದಿನ ಕಾದು ನೋಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಸಬೇಕು ಎಂಬುದು ಅನೇಕ ಸಚಿವರ ಅಭಿಪ್ರಾಯ. ಮುಖ್ಯಮಂತ್ರಿಯೂ ಅದೇ ಮನಃಸ್ಥಿತಿಯಲ್ಲಿದ್ದಾರೆ ಎಂದರು.

ಔಷಧಗಳ ಕೊರತೆ: ‘ಕಪ್ಪು ಶಿಲೀಂಧ್ರ ಸೋಂಕು ಅಥವಾ ಮ್ಯೂಕರ್ ಮೈಕೊಸಿಸ್ ಚಿಕಿತ್ಸೆಗೆ ಔಷಧಗಳ ಕೊರತೆ ಇದ್ದು, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಇದಕ್ಕಾಗಿ ಶತಪ್ರಯತ್ನ ಮಾಡುತ್ತಿದ್ದಾರೆ. ಕೆಲವು ಕಂಪನಿಗಳ ಜತೆಗೆ ಮಾತನಾಡಿ ಔಷಧಗಳನ್ನು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

2150 ವೈದ್ಯರ ನೇಮಕ: ರಾಜ್ಯದಲ್ಲಿ 2150 ವೈದ್ಯರು, 780 ತಜ್ಞ ವೈದ್ಯರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಅವರಿಗೆ ಸ್ಥಳ ನಿಯುಕ್ತಿ ಆದೇಶ ಆಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.