ದಾವಣಗೆರೆ: ವೈಭವದ ಮದುವೆಗಳಿಗೆ ಪ್ರೋತ್ಸಾಹ ನೀಡದೆ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ದುಂದುವೆಚ್ಚಗಳಿಗೆ ಕಡಿವಾಣ ಬೀಳಲಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ತಾಲ್ಲೂಕಿನ ಹೆಬ್ಬಾಳು ವಿರಕ್ತ ಮಠದಲ್ಲಿ ಬಸವ ಜಯಂತಿ ಅಂಗವಾಗಿ ಬುಧವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.
ವಿವಾಹದ ಹೆಸರಿನಲ್ಲಿ ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಲು ಸಾಮೂಹಿಕ ವಿವಾಹ ಉತ್ತಮ ನಡೆ. ಸಾಮೂಹಿಕ ವಿವಾಹ ಏರ್ಪಡಿಸುವುದರಿಂದ ಬಡವ-ಬಲ್ಲಿದ, ಜಾತಿ, ಧರ್ಮದ ಸಂಕೋಲೆಯಿಂದ ಹೊರ ಬರಲು ಸಹಾಯವಾಗುತ್ತದೆ. ಭಾವೈಕ್ಯ ಬಿಂಬಿಸುವ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಗ್ರಾಮಗಳಲ್ಲಿ ನಡೆಯಬೇಕು ಎಂದು ಆಶಿಸಿದರು.
ಹೆಬ್ಬಾಳು ಮಠದ ಮಹಾಂತ ಶ್ರೀಗಳು ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸುತ್ತಿದ್ದಾರೆ. ಅವರ ಕೆಲಸಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಾನ್ನಿಧ್ಯ ವಹಿಸಿದ್ದ ಹೆಬ್ಬಾಳು ವಿರಕ್ತ ಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ‘ಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ಹೆಚ್ಚಿನ ಮಹತ್ವವಿದೆ. ಇಲ್ಲಿನ ಧಾರ್ಮಿಕ ಸಂಸ್ಕಾರಗಳು ವಿಶ್ವಕ್ಕೆ ಮಾದರಿಯಾಗಿವೆ. ನವಜೋಡಿಗಳು ಮುಂದಿನ ಬದುಕಿನಲ್ಲಿ ಪರಸ್ಪರ ಅರಿತು ಬಾಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಸಲಹೆ ನೀಡಿದರು.
20 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟವು.
ಎಪಿಎಂಸಿ ಮಾಜಿ ಅಧ್ಯಕ್ಷ ಅಣಜಿ ಎಸ್.ಕೆ. ಚಂದ್ರಣ್ಣ, ಹೆಬ್ಬಾಳು ರುದ್ರಮುನಿ, ಬಾಬಣ್ಣ, ಶೇಖರಪ್ಪ, ಶಿವಪ್ಪ, ಪ್ರಶಾಂತ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.