
ಕಡರನಾಯ್ಕನಹಳ್ಳಿ: ಸಮೀಪದ ಹಿಂಡಸಘಟ್ಟಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಡೆಂಗಿ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ತಂಡ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ವ್ಯಕ್ತಿಯಲ್ಲಿ ಡೆಂಗಿ ಸೋಂಕು ಇರುವುದನ್ನು ಜಿಲ್ಲಾ ಕೀಟಶಾಸ್ತ್ರಜ್ಞ ಸತೀಶ್ ಮಾಳಗಿ ದೃಢಪಡಿಸಿದರು.
ಮುಂಜಾಗ್ರತಾ ಕ್ರಮವಾಗಿ ಗ್ರಾಮದ ಪುಷ್ಕರಿಣಿಯಲ್ಲಿ ಲಾರ್ವಾಗಳನ್ನು ನಾಶಪಡಿಸುವ ಗಪ್ಪಿ ಮತ್ತು ಗ್ಯಾಂಬೂಶಿಯಾ ಮೀನುಗಳನ್ನು ಬಿಡಲಾಗಿದೆ. ಗ್ರಾಮದ ಚರಂಡಿಗಳನ್ನು ಸ್ವಚ್ಛಗೊಳಿಸಲು ವಾಸನ ಗ್ರಾಮ ಪಂಚಾಯಿತಿಗೆ ಸೂಚಿಸಲಾಗಿದೆ ಎಂದು ಕೊಕ್ಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅರ್ಚಿತ್ ತಿಳಿಸಿದರು.
ಮನೆಯ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಡಲಾಗಿದೆ. ಸೋಂಕಿತ ವ್ಯಕ್ತಿಗೆ ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಲಾಗಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರಯ್ಯ ತಿಳಿಸಿದ್ದಾರೆ.
ಜಿಲ್ಲಾ ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ಆಂಜನೇಯ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಲ್ಹಾದ, ಆಶಾ ಕಾರ್ಯಕರ್ತೆಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.