ಹೊನ್ನಾಳಿ: ಸರ್ಕಾರಿ ಶಾಲೆ, ಕಾಲೇಜುಗಳಿಗೆ ಸಾಕಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆ, ಕಾಲೇಜುಗಳಿಗೆ ದಾಖಲಿಸುವ ಮೂಲಕ ಬೆಂಬಲ ನೀಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಸೋಮವಾರ ಟಿ.ಬಿ. ವೃತ್ತದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿದ ಶಾಸಕರು, ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿ ಅವರು ಮಾತನಾಡಿದರು.
‘ಶಾಸಕರು ಕಾಲೇಜಿಗೆ ಆಗಾಗ್ಗೆ ಭೇಟಿ ನೀಡುವ ಮೂಲಕ ಇಲ್ಲಿನ ಕುಂದು ಕೊರತೆಗಳನ್ನು ಈಡೇರಿಸುತ್ತಿದ್ದಾರೆ. ಸದ್ಯಕ್ಕೆ ಎರಡು ‘ಡಿ’ ದರ್ಜೆ ನೌಕರರ ಹುದ್ದೆಗಳ ಕೊರತೆ ಇದ್ದು, ಅದನ್ನು ತುಂಬಿಕೊಡಬೇಕು’ ಎಂದು ಪ್ರಾಂಶುಪಾಲ ರಾಮಚಂದ್ರಪ್ಪ ಕೋರಿದರು.
‘ಕಾಲೇಜಿನ ಆವರಣ ಗೋಡೆಗೆ ಹೊಂದಿಕೊಂಡಂತೆ ಗಿಡಗಂಟಿಗಳು ಬೆಳೆದಿದ್ದು, ಅವನ್ನು ತೆರವುಗೊಳಿಸಿಕೊಡಬೇಕು. ಕಾಲೇಜು ಮೈದಾನ ತಗ್ಗಿನಿಂದ ಕೂಡಿದ್ದು, ಮಳೆ ನೀರು ಸಂಗ್ರಹವಾಗುತ್ತಿದೆ. ಆದ್ದರಿಂದ ಮೈದಾನಕ್ಕೆ ಮಣ್ಣು ತುಂಬಿಸಿ ಎತ್ತರ ಮಾಡಿಸಬೇಕು. ತ್ಯಾಜ್ಯದ ನೀರು ಹೊರಹೋಗಲು ಪೈಪ್ಲೈನ್ಗಳನ್ನು ಅಳವಡಿಸಿಕೊಡಬೇಕು’ ಎಂದು ಮನವಿ ಮಾಡಿದರು.
ಕಾಲೇಜಿನ ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು, ಸಿಡಿಸಿ ಸಮಿತಿ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.