ADVERTISEMENT

ಕೆಲಸದಿಂದ ಬಿಡುಗಡೆಗೊಳಿಸುವ ಆದೇಶಕ್ಕೆ ವಿರೋಧ

ಹಾಸ್ಟೆಲ್‌, ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2018, 11:29 IST
Last Updated 7 ಡಿಸೆಂಬರ್ 2018, 11:29 IST
ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು
ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು   

ದಾವಣಗೆರೆ: ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರು ಸೇವೆಯನ್ನು ಕಾಯಂ ಮಾಡಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

2018ರ ಜೂನ್‌ನಲ್ಲಿ ಗುತ್ತಿಗೆ ನೌಕರರು ನಡೆಸಿದ ಪ್ರತಿಭಟನೆಗೆ ಮಣಿದ ಸರ್ಕಾರ ಮತ್ತೆ ಕೆಲಸಕ್ಕೆ ತೆಗೆದುಕೊಂಡಿತ್ತು. ಆದರೆ, ಅಕ್ಟೋಬರ್‌ 23ರಂದು ಸುತ್ತೋಲೆ ಹೊರಡಿಸಿದ ಸರ್ಕಾರ, ಆರು ತಿಂಗಳ ಅವಧಿಗೆ ಮಾತ್ರ ಗುತ್ತಿಗೆ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಇದರಿಂದಾಗಿ ಹಲವು ವರ್ಷಗಳಿಂದ ದುಡಿಯುತ್ತಿರುವ ಗುತ್ತಿಗೆ ನೌಕರರು ಅತಂತ್ರರಾಗಿದ್ದಾರೆ ಎಂದು ಅಳಲು ತೋಡಿಕೊಂಡರು.

ಸರ್ಕಾರ ಎಲ್ಲಾ ನೌಕರರನ್ನೂ ಕಾಯಂಗೊಳಿಸಿ, ಸೌಲಭ್ಯಗಳನ್ನು ನೀಡಬೇಕು. ಬಾಕಿ ಇರುವ ಮೂರು ತಿಂಗಳ ವೇತನ ಕೊಡಬೇಕು. ಎಲ್ಲಾ ನೌಕರರಿಗೂ ವಾರದ ರಜೆ ನೀಡಬೇಕು. ಸುಪ್ರೀಂ ಕೋರ್ಟ್‌ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಗುತ್ತಿಗೆದಾರರು ಕೆಲ ವಾರ್ಡನ್‌ಗಳಿಂದ ಆಗುತ್ತಿರುವ ಶೋಷಣೆಯನ್ನು ತಪ್ಪಿಸಬೇಕು. ಜಿಲ್ಲಾ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಧಿಕಾರಿ ಸಮಕ್ಷಮದಲ್ಲಿ ಸಂಘಟನೆಯ ಪದಾಧಿಕಾರಿಗಳ, ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಮುಖಂಡರಾದ ಕೆ.ಎಲ್‌. ಭಟ್‌, ಈರಣ್ಣ, ರೇಣುಕಮ್ಮ, ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೆ.ಎಚ್‌. ಆನಂದರಾಜು, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್‌. ಹಾಲೇಶ್‌ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌. ಸದಾಶಿವನಾಯ್ಕ, ಖಜಾಂಚಿ ಕೆ.ಎಚ್‌. ರವಿಕುಮಾರ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.