ಹೊನ್ನಾಳಿ: ಬೀದಿ ಬದಿ ವ್ಯಾಪಾರಿಗಳು ರಸ್ತೆಯಂಚಿನಲ್ಲಿ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ತುಮ್ಮಿನಕಟ್ಟೆ ರಸ್ತೆ ವಿಸ್ತರಣೆ ಮತ್ತು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಸಿಕ್ಕಿರುವುದರಿಂದ ಬೀದಿ ಬದಿ ವ್ಯಾಪಾರಿಗಳು ಸಂತೆ ಮೈದಾನದಲ್ಲಿ ವ್ಯಾಪಾರ ಮಾಡಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಕನಕದಾಸ ರಂಗಮಂದಿರದಲ್ಲಿ ಪುರಸಭೆಯಿಂದ ಶನಿವಾರ ಹಮ್ಮಿಕೊಂಡಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಹೊನ್ನಾಳಿ ಪಟ್ಟಣದಲ್ಲಿ ಅನೇಕ ಸಮಸ್ಯೆಗಳಿದ್ದು, ಅದಕ್ಕೆ ಪರಿಹಾರ ಕೊಡಬೇಕಾಗಿದೆ. ಅದಕ್ಕೆ ಪುರಸಭೆಯ ಎಲ್ಲ 18 ಸದಸ್ಯರ ಸಹಕಾರ ಬೇಕು. ಅವರಿಗೆ ಈಗ ಅಧಿಕಾರ ಇಲ್ಲದಿರುವುದು ಸ್ವಲ್ಪ ತೊಡಕಾಗಿದೆ. ಪಕ್ಷಾತೀತವಾಗಿ ಎಲ್ಲ ಸದಸ್ಯರು ಒಟ್ಟಾಗಿ ಕುಳಿತು ಮಾತನಾಡಿ ಸಮಸ್ಯೆಗಳಿಗೆ ಪರಿಹಾರ ಕೊಡುವ ಕೆಲಸ ಮಾಡಬೇಕಾಗಿದೆ’ ಎಂದರು.
ಮುಖ್ಯಾಧಿಕಾರಿ ಎಚ್. ನಿರಂಜನಿ ಮಾತನಾಡಿ, ‘ಬೀದಿ ಬದಿ ವ್ಯಾಪಾರಿಗಳು ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ಮಾಡುತ್ತಿರುವುದರಿಂದ ಜನರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಮ್ಮ ಸಿಬ್ಬಂದಿ ಎಷ್ಟು ಹೇಳಿದರೂ ಅದನ್ನು ದೌರ್ಜನ್ಯ ಎಂದು ಬಿಂಬಿಸುತ್ತಿದ್ದಾರೆ. ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ನಾವು ರಸ್ತೆ ಸುರಕ್ಷತಾ ಸಂಚಾರದ ಕಡೆಗೂ ಗಮನ ಕೊಡಬೇಕಾಗಿದೆ. ಅಪಘಾತ, ಅನಾಹುತಗಳು ನಡೆದರೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.
ಗುರುತಿನ ಚೀಟಿಗಳನ್ನು ಎರಡು ವರ್ಷಕ್ಕೊಮ್ಮೆ ನವೀಕರಣ ಮಾಡಿಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಸದಸ್ಯ ಧರ್ಮಪ್ಪ, ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷೆ ರೇಣುಕಮ್ಮ ಮಾತನಾಡಿದರು. ಶಾಸಕ ಡಿ.ಜಿ. ಶಾಂತನಗೌಡ ಅವರು 124 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಿದರು.
ಪುರಸಭೆ ಸದಸ್ಯರಾದ ಮೈಲಪ್ಪ, ರಾಜೇಂದ್ರಕುಮಾರ್, ಎಂಜಿನಿಯರ್ ದೇವರಾಜ್, ಆರೋಗ್ಯ ನಿರೀಕ್ಷಕ ಪರಮೇಶ್ನಾಯ್ಕ ಹಾಗೂ ಫಲಾನುಭವಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.