ದಾವಣಗೆರೆ: ಕೊರೊನಾ ವೈರಸ್ ನಿಯಂತ್ರಿಸುವ ಹಿನ್ನೆಲೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾರ್ಗಸೂಚಿಯನ್ವಯ ಸರಳವಾಗಿ, ಅಚ್ಚುಕಟ್ಟಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳೊಂದಿಗೆ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ ಮಕ್ಕಳಿಗೆ ಅವಕಾಶವಿಲ್ಲ. ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಮಾಡಿ ಮತ್ತು ಸ್ಯಾನಿಟೈಸೇಷನ್ ನಿರ್ವಹಿಸಿ ಹೆಚ್ಚು ಜನರನ್ನು ಸೇರಿಸದೇ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಬೇಕಿದೆ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ’ ಎಂದು ತಿಳಿಸಿದರು.
‘ಆಗಸ್ಟ್ 15 ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಧ್ವಜಾರೋಹಣ ನೆರವೇರಿಸಲಿದ್ದು, ಡಿಆರ್, ಸಿವಿಲ್, ಹೋಂ, ಅಬಕಾರಿ, ಅರಣ್ಯ ಮತ್ತು ಅಗ್ನಿ ಶಾಮಕದಳದ ತಂಡಗಳು ಮಾತ್ರ ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ತಂಡಗಳಿಗೆ ಅವಕಾಶ ಇರುವುದಿಲ್ಲ’ ಎಂದು ತಿಳಿಸಿದರು.
‘ಜಿಲ್ಲಾ ಮಟ್ಟದ ಇಲಾಖೆಗಳ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಅಂದು ಬೆಳಿಗ್ಗೆ 7.30ಕ್ಕೆ ತಪ್ಪದೇ ಧ್ವಜಾರೋಹಣ ನೆರವೇರಿಸಿ, ನಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಿರಬೇಕು’ ಎಂದು ಸೂಚಿಸಿದರು.
‘ಧ್ವಜಾರೋಹಣದ ನಂತರ ಉಸ್ತುವಾರಿ ಸಚಿವರು ಸ್ವಾತಂತ್ರ್ಯ ದಿನಾಚರಣೆ ಕುರಿತು ಸಂದೇಶ ನೀಡುವರು. ಕೋವಿಡ್ ಸೈನಿಕರಾದ ವೈದ್ಯರು, ಆರೋಗ್ಯ ಸಿಬ್ಬಂದಿ, ಕೋವಿಡ್ನಿಂದ ಗುಣಮುಖರಾದವರು ಹಾಗೂ ಪೌರಕಾರ್ಮಿಕರನ್ನು ಗೌರವಿಸಲಾಗುವುದು’ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೀಶ್, ಡಿಡಿಪಿಐ ಪರಮೇಶ್ವರಪ್ಪ, ಡಿಎಚ್ಒ ಡಾ.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಎಚ್. ವಿಜಯಕುಮಾರ್, ಡಿವೈಎಸ್ಪಿ ನಾಗೇಶ್ ಐತಾಳ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.