
ದಾವಣಗೆರೆ: ಜಾಗತಿಕ ವಿದ್ಯಮಾನಗಳ ನಡುವೆಯೂ ದೇಶದ ಭದ್ರತೆಗೆ ಧಕ್ಕೆ ಉಂಟಾಗದಿರಲು ಸಂವಿಧಾನವೇ ಕಾರಣ. ಭಾರತದಲ್ಲಿ ಸಂವಿಧಾನವೇ ಸರ್ವಶ್ರೇಷ್ಠ, ಅದೇ ಪರಮೋಚ್ಛ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ ಅಭಿಪ್ರಾಯಪಟ್ಟರು.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಗಣರಾಜ್ಯ ದಿನವು ದೇಶದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆಯ ಮೂಲಕ ಎಲ್ಲ ಭಾರತೀಯರನ್ನು ಭಾವನಾತ್ಮಕವಾಗಿ ಒಗ್ಗೂಡಿಸುವ ಬೆಸುಗೆಯಾಗಿದೆ. ಭಾಷೆ, ಪ್ರದೇಶ, ಜಾತಿ - ಧರ್ಮಗಳ ಭೇದವಿಲ್ಲದೆ ಸಂವಿಧಾನವನ್ನು ಎಲ್ಲರೂ ಒಪ್ಪಿದ್ದಾರೆ’ ಎಂದರು.
‘ದೇಶದಲ್ಲಿ ಪ್ರತಿಯೊಬ್ಬರಿಗೂ ಸಿಕ್ಕಿರುವ ಸ್ವಾತಂತ್ರ್ಯ, ಅಭಿವ್ಯಕ್ತಿ, ಅಡಳಿತ, ನೈತಿಕತೆ, ಜೀವನ, ಉದ್ಯೋಗ, ಹಕ್ಕು ಎಲ್ಲವೂ ಸಂವಿಧಾನದ ಕೊಡುಗೆ. ಹೀಗಾಗಿ ಪ್ರತಿಯೊಬ್ಬರೂ ಸಂವಿಧಾನಿಕ ಮೌಲ್ಯಗಳನ್ನು ಅನುಸರಿಸಬೇಕು, ಗೌರವಿಸಬೇಕು’ ಎಂದು ಸಲಹೆ ನೀಡಿದರು.
ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ಸಿ.ಕೆ. ರಮೇಶ, ಡೀನ್ಗಳಾದ ಪ್ರೊ.ವೆಂಕಟೇಶ ಕೆ., ಪ್ರೊ.ಲೋಕೇಶ ಎಂ.ಯು. ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.