ADVERTISEMENT

ಬಡವರಿಗೆ ನಿವೇಶನ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 11:29 IST
Last Updated 7 ಜೂನ್ 2021, 11:29 IST

ದಾವಣಗೆರೆ: ಸರ್ಕಾರಿ ಜಮೀನುಗಳನ್ನು ಗುರುತಿಸಿ ಅವುಗಳನ್ನು ನಿವೇಶನಗಳನ್ನಾಗಿ ಮಾಡಿ ನಗರದ ದಕ್ಷಿಣ ಕ್ಷೇತ್ರದ ಬಡವರಿಗೆ ಹಂಚಿಕೆ ಮಾಡಬೇಕು ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ದಕ್ಷಿಣ ವಲಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮುದ್ದಾಪುರ ರೆಹಮಾನ್ ಒತ್ತಾಯಿಸಿದರು.

ದಕ್ಷಿಣ ಕ್ಷೇತ್ರದ ಭಾಗದ ಜನರು ಸ್ವಂತ ಮನೆಯಿಲ್ಲದೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ತಿಂಗಳ ಬಾಡಿಗೆ ಹಾಗೂ ಮುಂಗಡ ಹಣ ಪಾವತಿಸಲು ಪರದಾಡುತ್ತಿದ್ದಾರೆ. ಇಂತಹವರನ್ನು ಗುರುತಿಸಿ ಅವರಿಗೆ ಮನೆ ನೀಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ದಾವಣಗೆರೆ ದಕ್ಷಿಣ ಭಾಗಕ್ಕೆ ಹೊಂದಿಕೊಂಡಂತಿರುವ ಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಅವರು ಜಾಗವನ್ನು ಗುರುತಿಸಿ ಉಚಿತವಾಗಿ ಅಲ್ಲದಿದ್ದರೂ ಕಡಿಮೆ ದರಕ್ಕೆ ನಿವೇಶನ ನೀಡಬೇಕು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಅನೇಕ ಶಾಸಕರು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಜಮೀನನ್ನು ಲಪಟಾಯಿಸಿದ್ದಾರೆ. ಜಿಲ್ಲೆಯ ಇಬ್ಬರು ಮಾಜಿ ಹಾಗೂ ಹಾಲಿ ಶಾಸಕರು ಇವರಲ್ಲಿ ಸೇರಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳ ಮುಖಾಂತರ ಲಪಟಾಯಿಸಿರುವ ಸರ್ಕಾರಿ ಜಮೀನನ್ನು ಬಿಡಿಸಿಕೊಂಡು ಬಡವರಿಗೆ ಹಂಚಬೇಕು ಎಂದು ಆಗ್ರಹಿಸಿದರು.

ADVERTISEMENT

ಜಿಲ್ಲಾ ಉಪಾಧ್ಯಕ್ಷ ಮೌನೇಶ್ವರಚಾರಿ, ಖಜಾಂಚಿ ಹುಸೇನ್ ಸಾಬ್, ಮೊಹಮ್ಮದ್ ಹನೀಫ್, ರಾಜಾ ಮಿಯಾಸಾಬ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.